ಕರ್ನಾಟಕ ಸಚಿವ ಸಂಪುಟ ವಿಸ್ತರಣೆ  
ರಾಜಕೀಯ

ಪ್ರತಿಭಟನೆ, ಲಾಬಿಗೆ ಇಲ್ಲ ಮಣೆ: ಸಚಿವ ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್‌ ನಿರ್ಧಾರವೇ ಅಂತಿಮ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಳನ್ನು ಪಡೆದು ಸಚಿವ ಸ್ಥಾನಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ.

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರು ನಡೆಸುತ್ತಿರುವ ಲಾಬಿಗೆ ಮನ್ನಣೆ ನೀಡದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿರುವುದಾಗಿ ತಿಳಿದುಬಂದಿದ್ದು, ರಾಜ್ಯ ನಾಯಕತ್ವದೊಂದಿಗೆ ಮತ್ತಷ್ಟು ಸಮಾಲೋಚನೆ ನಡೆಸದೆ ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಸ್ವತಃ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಳನ್ನು ಪಡೆದು ಸಚಿವ ಸ್ಥಾನಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಈಗ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಅನುಮೋದನೆ ಪಡೆದ ಬಳಿಕ ಹೆಸರುಗಳನ್ನು ಅಧಿಕೃತವಾಗಿ ಘೋಷಿಸುವುದು ಮಾತ್ರ ಬಾಕಿಯಿದೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಅವರು ಜುಲೈ 3 ಅಥವಾ 4ರಂದು ಭಾರತಕ್ಕೆ ಮರಳುವ ನಿರೀಕ್ಷೆಯಿದೆ.

ಕರ್ನಾಟಕದ ರಾಜಕೀಯ ಪರಿಸ್ಥಿತಿಯ ಬಗ್ಗೆ ಸುರ್ಜೇವಾಲಾ ಅವರಿಗೆ ಸಂಪೂರ್ಣ ಅರಿವಿದ್ದು, 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗುವಂತೆ ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬುದರ ಬಗ್ಗೆ ಅವರಿಗೆ ಸ್ಪಷ್ಟ ತಿಳುವಳಿಕೆ ಇದೆ ಎಂದು ಮೂಲಗಳು ಹೇಳಿವೆ.

ಆದ್ದರಿಂದ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಯಾವುದೇ ರಾಜ್ಯ ನಾಯಕರನ್ನು ದೆಹಲಿಗೆ ಕರೆಯುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

ರಂದೀಪ್ ಸುರ್ಜೇವಾಲಾ ಅವರೊಂದಿಗೆ ಉತ್ತಮ ಹೊಂದಾಣಿಕೆ ಹೊಂದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯುವ ಹಾಗೂ ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವ ವಿಷಯದಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಹುಲ್ ಗಾಂಧಿ ಅವರೂ ಇದೇ ಅಭಿಪ್ರಾಯವನ್ನು ಹೊಂದಿದ್ದಾರೆ ಎನ್ನಲಾಗಿದೆ.

ಪಕ್ಷದ ಆಂತರಿಕ ಮೂಲಗಳ ಪ್ರಕಾರ, ಪ್ರಸ್ತುತ ಸಚಿವ ಸಂಪುಟದಲ್ಲಿ 20 ಹುದ್ದೆಗಳು ಖಾಲಿಯಿದ್ದು, ಅವುಗಳಲ್ಲಿ ಕನಿಷ್ಠ 15 ಸ್ಥಾನಗಳನ್ನು ಹೊಸ ಮುಖಗಳಿಂದ ಭರ್ತಿ ಮಾಡುವ ಸಾಧ್ಯತೆ ಇದೆ. ಜೊತೆಗೆ, ಜಾತಿ ಹಾಗೂ ಪ್ರಾದೇಶಿಕ ಸಮತೋಲನಕ್ಕೂ ಆದ್ಯತೆ ನೀಡಲಾಗುತ್ತದೆ.

ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳಾಗಿದ್ದ 50ಕ್ಕೂ ಹೆಚ್ಚು ಶಾಸಕರು ತಮ್ಮ ಬೆಂಬಲಿಗರಿಂದ ಪ್ರತಿಭಟನೆಗಳನ್ನು ನಡೆಸಿ ಬಹಿರಂಗವಾಗಿ ಲಾಬಿ ನಡೆಸುತ್ತಿದ್ದರು. ಆದರೆ, ಈಗ ಆ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಿವೆ.

ಆದಾಗ್ಯೂ, ಕೆಲ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ಹಿರಿಯ ನಾಯಕರನ್ನು ಗೌಪ್ಯವಾಗಿ ಭೇಟಿ ಮಾಡಿ ತಮ್ಮ ಪ್ರಯತ್ನವನ್ನು ಮುಂದುವರಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ತಿಳಿಸಿದ್ದಾರೆ.

ಎಲ್ಲವೂ ಯೋಜನೆಯಂತೆ ನಡೆದರೆ, ಜುಲೈ ಮೂರನೇ ವಾರದಲ್ಲಿ ಆರಂಭವಾಗುವ ಸಾಧ್ಯತೆಯಿರುವ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೂ ಮುನ್ನ, ಜುಲೈ 10ರೊಳಗೆ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ: 'ಕೋಟ್ಯಾಂತರ ಭಕ್ತರ ನಂಬಿಕೆಗೆ ಮಾಡಿದ ಅಪಮಾನ': ಪ್ರಧಾನಿ ಮೋದಿ ಮೌನದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಪಶ್ಚಿಮ ಬಂಗಾಳದಲ್ಲಿ ಭಾರೀ ದುರಂತ: ಹಲ್ದಿಯಾ ಪೆಟ್ರೋಕೆಮಿಕಲ್ಸ್‌ನಲ್ಲಿ ಭೀಕರ ಅಗ್ನಿ ಅವಘಡ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ..!

"ಭಾರತದ ಜಲ ಬಾಂಬ್‌ಗೆ ಪಾಕ್ ನಡುಕ": ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!

ಪಾರದರ್ಶಕ, ಪುರಾವೆ ಆಧಾರಿತ ಮತದಾರರ ಪಟ್ಟಿಗಳ ಪರಿಷ್ಕರಣೆಗೆ ರಾಜ್ಯ ಸಚಿವ ಸಂಪುಟ ಬೆಂಬಲ! ಕಳವಳವೇನು?

'One Nation, One Election' ಮಸೂದೆ ಮತ್ತಷ್ಟು ವಿಳಂಬ?: ಮುಂಗಾರು ಅಧಿವೇಶನದಲ್ಲೂ JPC ವರದಿ ಅನುಮಾನ..!