ದಾವಣಗೆರೆ: ನಾಯಕತ್ವ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಉಳಿದ 2 ವರ್ಷಕ್ಕೆ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡುತ್ತಾರೆಂದು ಡಿಸಿಎಂ ಡಿಕೆ ಶಿವಕುಮಾರ್ ಕಾಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಂದು ರೀತಿಯ ಭಿನ್ನಮತವಿದ್ದರೆ ಇತ್ತ ಬಿಜೆಪಿಯಲ್ಲೂ ಅಸಮಾಧಾನ ಭುಗಿಲೆದ್ದಿದೆ. ಚುನಾವಣೆಗೆ ಇನ್ನು 2 ವರ್ಷ ಬಾಕಿ ಇರುವಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿರುವುದು ಹಲವು ನಾಯಕರು ಆಕ್ರೋಶಗೊಳ್ಳುವಂತೆ ಮಾಡಿದೆ.
ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರ ಜನ್ಮ ದಿನದ ಕಾರ್ಯಕ್ರಮ ಫೆಬ್ರುವರಿ 28ರಂದು ಹೊನ್ನಾಳಿಯಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಎಸ್ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ಘೋಷಣೆ ಮಾಡಿದ್ದರು. ಹೊನ್ನಾಳಿಯಲ್ಲಿ ಎಂಪಿ ರೇಣುಕಾಚಾರ್ಯ, ಚನ್ನಗಿರಿ- ಮಾಡಾಳ್ ವಿರೂಪಾಕ್ಷಪ್ಪ, ಹರಿಹರ-ಚಂದ್ರಶೇಖರ ಪೂಜಾರ, ದಾವಣಗೆರೆ ಉತ್ತರ ಲೋಕಕೆರೆ ನಾಗರಾಜ್, ಜಗಳೂರು ಎಸ್ ವಿ ರಾಮಚಂದ್ರ ಹಾಗೂ ಹರಪನಹಳ್ಳಿ-ಕರುಣಾಕರ ರೆಡ್ಡಿಗೆ ಟಿಕೆಟ್ ಘೋಷಣೆ ಮಾಡಿದ್ದರು. ಇದು ಇತರೆ ನಾಯಕರ ಆಕ್ರೊಶಕ್ಕೆ ಕಾರಣವಾಗಿದೆ.
ದಾವಣಗೆರೆ ಬಿಜೆಪಿ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಶಾಂತರಾಜ್ ಪಾಟೀಲ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಚರ್ಚೆಗಳನ್ನು ಮಾಡದೇ ಅಭ್ಯರ್ಥಿಗಳ ಹೆಸರನ್ನು ಬಿಎಸ್ ವೈ ಘೋಷಿಸಿದ್ದಾರೆ. ಪಕ್ಷದ ಶಿಷ್ಟಾಚಾರವನ್ನು ಉಲ್ಲಂಘಿಸುವಂತಹ ಹೇಳಿಕೆಯನ್ನು ಯಡಿಯೂರಪ್ಪ ಅವರಿಂದ ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಅಭ್ಯರ್ಥಿ ಆಯ್ಕೆಗೆ ಬಿಜೆಪಿಯಲ್ಲಿ ಒಂದು ಶಿಷ್ಟಾಚಾರವಿದೆ. ಕೇಂದ್ರ ಸಂಸದೀಯ ಮಂಡಳಿಯು ಅಭ್ಯರ್ಥಿ ಆಯ್ಕೆ ಮಾಡುತ್ತದೆ. ಏಕಾಏಕಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡುವುದು ಸರಿಯಲ್ಲ ಎಂದರು.