ಬೆಂಗಳೂರು: ರಾಜ್ಯ ರಾಜಕಾರದಲ್ಲಿ ಫೋನ್ ಕದ್ದಾಲಿಕೆ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ನಾಯಕರ ನಡುವಿನ ಹೇಳಿಕೆ ತಾರಕಕ್ಕೇರಿದೆ. ಡಿಸಿಎಂ ಡಿಕೆ ಬಣದ ಮೇಲೆ ನಿಗಾ ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಅವರ ಬಣದ ನಾಯಕರ ಮೇಲೆ ಕುಮಾರಸ್ವಾಮಿ ಪರೋಕ್ಷವಾಗಿ ಆರೋಪ ಮಾಡಿದ್ದು, ಇದಕ್ಕೆ ಸಿದ್ದರಾಮಯ್ಯ ಸಹ ವಿಪಕ್ಷಗಳಿಗೆ ತಿರುಗೇಟು ನೀಡಿದ್ದರು.
ಇದೀಗ ಸಿದ್ದರಾಮಯ್ಯ ಹೊರಡಿಸಿದ ಪತ್ರಿಕಾ ಪ್ರಕಟಣೆಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ ಈ ನಡುವೆ ನೀವು ಬಹಳ ಪುರುಸೊತ್ತಾಗಿದ್ದೀರಿ ಎಂದು ಕಾಣುತ್ತದೆ. ಕೆಲಸ ಮಾಡುವುದು ಬಿಟ್ಟು ಕೌಂಟರ್ ಕೊಡುವುದರಲ್ಲಿ ನೀವು ಹೆಚ್ಚು ಬ್ಯುಸಿಯಾಗಿದ್ದೀರಿ. ಕುಂಬಳಕಾಯಿ ಕಳ್ಳ ಎಂದರೆ ನಾನೇ ಎಂದು ಹೆಗಲು ಮುಟ್ಟಿ ನೋಡಿಕೊಂಡರೆ ನಾನೇನು ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.
ವಿರೋಚಿತ ತ್ಯಾಗವನ್ನು ಒಮ್ಮೆ ಪ್ರದರ್ಶಿಸಿ
ದೇವೇಗೌಡರು ಅಧಿಕಾರವನ್ನು ವಿರೋಚಿತವಾಗಿ ತ್ಯಜಿಸಿದರು. ರಾಜೀನಾಮೆ ಘೋಷಿಸಿದ ಮರುಕ್ಷಣದಲ್ಲೇ ಸಂಸತ್ತಿನಲ್ಲಿಯೇ ವಾಜಪೇಯಿ ಅವರು ಮುಕ್ತ ಬೆಂಬಲ ಕೊಡುತ್ತೇವೆ ಎಂದರೂ ಆ ಅಧಿಕಾರ ಬೇಡವೆಂದು ವಿನಯದಿಂದ ಧಿಕ್ಕರಿಸಿದರು. ಅವರ ಗರಡಿಯಲ್ಲಿ ಪಳಗಿ, ಈಗಲೂ ಬೆಳಗುತ್ತಿರುವ ನೀವೂ ಅಂಥ ಕೆಚ್ಚನ್ನು, ವಿರೋಚಿತ ತ್ಯಾಗವನ್ನು ಒಮ್ಮೆ ಪ್ರದರ್ಶಿಸಿ. ನಿಮ್ಮ ಕುಚುಕು ಗೆಳೆಯನ ಮೇಲೆ ಪ್ರೀತಿ ತೋರಿಸಿ. ಗುಂಡಿಗೆ ಸಾಲುತ್ತಿಲ್ಲವೇ ಮಿಸ್ಟರ್ ಸಿದ್ದರಾಮಯ್ಯನವರೇ, ಸೋತರೆ ಸೋಲಬೇಕು ಬಾಹುಬಲಿಯಂತೆ! ನಾನು ಸೋತಿದ್ದೇನೆ, ಓಡಿ ಹೋಗಿಲ್ಲ. ನಾನು ರಣಹೇಡಿಯಂತೆ ಪಲಾಯನ ಮಾಡುವುದಿಲ್ಲ, ನೆನಪಿರಲಿ ಎಂದು ಕುಮಾರಸ್ವಾಮಿ ಖಾರವಾಗಿ ಟ್ವೀಟ್ ಮಾಡಿದ್ದಾರೆ.