ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಭಿನ್ನಮತ ಸ್ಫೋಟಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಜೆಡಿಎಸ್ ನಾಯಕರು, ವಿಶೇಷವಾಗಿ ಶಾಸಕರು, ಬಿಜೆಪಿ ಜೊತೆಗಿನ ಮೈತ್ರಿ ಇದ್ದರೂ ಇರದಿದ್ದರೂ ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಎಂದು ಹೇಳಿಕೆ ನೀಡುತ್ತಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಗುರ್ಮಿಟ್ಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅರುವ, “ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ಮೈತ್ರಿ ಪಕ್ಷಗಳಿಗೆ 140–150 ಸ್ಥಾನಗಳು ಸಿಗುತ್ತವೆ ಎಂದು ಹೇಳಿದ್ದಾರೆ.
ಇದೇ ವೇಳೆ ಮೈತ್ರಿ ಇದ್ದರೂ ಇಲ್ಲದಿದ್ದರೂ ನಮ್ಮ ಸಿಎಂ ಅಭ್ಯರ್ಥಿ ಕುಮಾರಸ್ವಾಮಿಯವರೇ ಎಂದೂ ಹೇಳಿದ್ದು, ಬಿಜೆಪಿ ಪಕ್ಷದಲ್ಲಿ ಸಿಎಂ ಅಭ್ಯರ್ಥಿ ಯಾರೆಂದು ಹೇಳಲಿ ಎಂದು ಪ್ರಶ್ನಿಸಿದ್ದಾರೆ.
ಬಳಿಕ ರಾಜ್ಯ ಬಜೆಟ್ ವಿರುದ್ಧ ಬಿಜೆಪಿ ನಡೆಸಿದ್ದ ಪ್ರತಿಭಟನೆ ಕುರಿತಂತೆಯೂ ಅಸಮಾಧಾನ ವ್ಯಕ್ತಪಡಿಸಿದ ಅವರು, ಎರಡೂ ಪಕ್ಷಗಳ ನಡುವೆ ಸಮನ್ವಯದ ಕೊರತೆ ಇದೆ ಎಂದು ಆರೋಪಿಸಿದರು.
ನಾವು ಬಿಜೆಪಿಯನ್ನು ಪ್ರೀತಿಸುತ್ತೇವೆ, ಆದರೆ ಅವರು ನಮ್ಮನ್ನು ಪ್ರೀತಿಸುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಿಂದಾಗಿ ನಾವು 19 ಸ್ಥಾನಗಳನ್ನು ಗೆದ್ದಿದ್ದೇವೆ. ಅಧಿವೇಶನದ ಸಮಯದಲ್ಲಿ ನಾವು ಸಮನ್ವಯ ಸಭೆಗಳನ್ನು ನಡೆಸುತ್ತಿದ್ದೆವು. ಆದರೆ, ನಿನ್ನೆ, ಸಮನ್ವಯ ಸಭೆ ನಡೆಸುವ ಬಗ್ಗೆ ಬಿಜೆಪಿ ಕಡೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಪ್ರತಿಭಟನೆಗೆ ತೆರಳುವ ಕೇವಲ 30 ನಿಮಿಷಗಳ ಮೊದಲು ನಮಗೆ ತಿಳಿಸಿದ್ದರು. ಬಿಜೆಪಿಯ ರಾಷ್ಟ್ರೀಯ ನಾಯಕರು ನಮ್ಮ ಮೇಲೆ ಪ್ರೀತಿ ಮತ್ತು ವಾತ್ಸಲ್ಯ ಹೊಂದಿದ್ದಾರೆ. ರಾಜ್ಯದ ಜನರು ಕುಮಾರಸ್ವಾಮಿ ಸಿಎಂ ಆಗಬೇಕೆಂದು ಬಯಸುತ್ತಾರೆಂದು ತಿಳಿಸಿದರು.
ಈ ನಡುವೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮಾತನಾಡಿ, ಪ್ರಧಾನಿ ಮೋದಿ ಅವರು ಸಿಎಂ ಅಭ್ಯರ್ಥಿ ಬಗ್ಗೆ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ನಾವು ಕುಮಾರಸ್ವಾಮಿ ಸಿಎಂ ಅಭ್ಯರ್ಥಿ ಎಂದು ಹೇಳುತ್ತೇವೆ. ಸಮೀಕ್ಷೆ ನಡೆಸಿದ ನಂತರ ಬಿಜೆಪಿ ಸಿಎಂ ಅಭ್ಯರ್ಥಿಯ ಬಗ್ಗೆ ನಿರ್ಧರಿಸಲಿ ಎಂದು ಸಲಹೆ ನೀಡಿದರು.