ಕಲಬುರಗಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಬ್ಬ ಸರ್ವಾಧಿಕಾರಿಯಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆತನ ಗುಲಾಮನಾಗಿದ್ದಾರೆಂದು ಅವರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತೀವ್ರ ಟೀಕೆ ಮಾಡಿದ್ದಾರೆ.
ಭಾನುವಾರ ಚಿತ್ತಾಪುರ ಪಟ್ಟಣದಲ್ಲಿ ನಡೆದ ರೂ.1,060 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಮೆರಿಕ ಈಗ ರಷ್ಯಾದಿಂದ ತೈಲ ಖರೀದಿಗೆ ಕೇವಲ ಒಂದು ತಿಂಗಳ ಅವಕಾಶ ನೀಡಿದ್ದು, ಪ್ರಧಾನಿ ಮೋದಿ ಅಮೆರಿಕ ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿಯ ಬಗ್ಗೆ ಮಾತನಾಡಿ, ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಕಾಲದಲ್ಲಿ ‘ನಾನ್ ಅಲೈನ್ ಮೆಂಟ್’ ಸಿದ್ಧಾಂತ ಅಳವಡಿಸಿಕೊಂಡಿದ್ದು ವಿಶ್ವಶಾಂತಿಗೆ ಕಾರಣವಾಗಿತ್ತು. ಆದರೆ, ಮೋದಿ ಈಗ ಮಾಡುತ್ತಿರುವುದೇನು? ಮೋದಿ ಇಸ್ರೇಲ್ಗೆ ಹೋಗಿ ಬಂದ ನಂತರ ಅದು ಇರಾನ್ ಮೇಲೆ ಬಾಂಬ್ ಹಾಕಿತು. ಇರಾನ್ ದೇಶದ ಮಖ್ಯಸ್ಥ ಖಮೇನಿಯವರನ್ನು ಅಮೆರಿಕದವರು ಹತ್ಯೆ ಮಾಡಿದರು. ಒಂದು ದೇಶದ ಮುಖ್ಯಸ್ಥನನ್ನು ಹತ್ಯೆ ಮಾಡಿದರೆ ಆ ದೇಶ ಶಾಂತಿಯಿಂದ ಇರುತ್ತದೆಯೇ? ಇದು ವಿಶ್ವ ಶಾಂತಿಯಿಂದ ಇರಲು ಸಾಧ್ಯವಾಗುತ್ತದೆಯಾ ಎಂದು ಪ್ರಶ್ನಿಸಿದದ ಅವರು, ಮೋದಿ ಟ್ರಂಪ್ ಜೊತೆ ಸ್ನೇಹ ಬೆಳೆಸಿ ದೇಶವನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಆರೋಪಿಸಿದರು.
"ಎಪ್ಸ್ಟೀನ್ ಫೈಲ್ನಲ್ಲಿ ಲೈಂಗಿಕ ಅಪರಾಧಿಗಳ ಕುರಿತ ಮಾಹಿತಿಗಳಿವೆ. ಟ್ರಂಪ್ ಮೋದಿಯನ್ನು ಹೆದರಿಸಲು ಅದನ್ನು ಇಟ್ಟುಕೊಂಡಿದ್ದಾರೆಂದು ಆರೋಪಿಸಿದರು.
ಕಾಂಗ್ರೆಸ್ 75 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದರೂ, ಅದು ಯಾವಾಗಲೂ ದೇಶದ ಹಿತಾಸಕ್ತಿಗಳನ್ನು ರಕ್ಷಿಸಿತು. "ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭಾರತದ ಮೇಲೆ ಬೇರೆ ಯಾವುದೇ ದೇಶ ಷರತ್ತುಗಳನ್ನು ವಿಧಿಸಲಿಲ್ಲ. 'ನಾವು ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸ ಎಲ್ಲರಿಗೂ ತಿಳಿದಿದೆ.
"ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ್ ಖರ್ಗೆ, ಸಿದ್ದರಾಮಯ್ಯ, ಶಿವಕುಮಾರ್ ಮತ್ತು ನನ್ನನ್ನು ಟೀಕಿಸುವುದನ್ನು ಬಿಟ್ಟರೆ ಬಿಜೆಪಿಗೆ ಏನೂ ಕೆಲಸವಿಲ್ಲ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸ ಎಲ್ಲರಿಗೂ ತಿಳಿದಿದೆ. ಗದಗ-ವಾಡಿ ರೈಲು ಮಾರ್ಗ, ರಸ್ತೆಗಳು ಮತ್ತು ಹೆದ್ದಾರಿಗಳನ್ನು ನಿರ್ಮಿಸಿದ್ದು ನಾವೇ, ನೀವಲ್ಲ ಎಂದು ಬಿಜೆಪಿ ವಿರುದ್ಧ ಗುಡುಗಿದರು.
ನಾವು 371J ವಿಧಿಯನ್ನು (ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದು) ಜಾರಿಗೆ ತಂದಿದ್ದೇವೆ. ಆಗ ಬಿಜೆಪಿಯ ಗೃಹ ಸಚಿವರಾಗಿದ್ದ ಎಲ್.ಕೆ. ಅಡ್ವಾಣಿ ನಮ್ಮ ಬೇಡಿಕೆಗೆ ಸ್ಪಂದಿಸಲಿಲ್ಲ. 371J ವಿಧಿಯಿಂದ ನನಗೆ, ನನ್ನ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ಯಾವುದೇ ಪ್ರಯೋಜನವಾಗುವುದಿಲ್ಲ, ಬದಲಾಗಿ ಸಾಮಾನ್ಯ ಜನರಿಗೆ ಅದರ ಲಾಭವಾಗುತ್ತಿದೆ. ಇಂದು, ಇದು ವಿದ್ಯಾರ್ಥಿಗಳಿಗೆ ಮೆಕ್ಯಾನಿಕಲ್ ಎಂಜಿನಿಯರಿಂಗ್ ಸೀಟು ಪಡೆಯಲು ಸಹಾಯ ಮಾಡುತ್ತಿದೆ ಎಂದು ಹೇಳಿದರು.
ಇದೇ ವೇಳೆ ಚಿತ್ತಾಪುರದ ಶಾಸಕರೊಬ್ಬರು ಇಡೀ ದೇಶದ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಾರೆ ಮತ್ತು ಮಾತನಾಡುತ್ತಿದ್ದಾರೆ ಎಂಬುದು ನನಗೆ ಹೆಮ್ಮೆ ತಂದಿದೆ ಎಂದು ತಮ್ಮ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಕೊಂಡಾಡಿದರು.