ಬೆಂಗಳೂರು: ಒಡಿಶಾ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗುತ್ತಾರೆ ಎಂಬ ಭಯದಿಂದ 8 ಮಂದಿ ಕಾಂಗ್ರೆಸ್ ಶಾಸಕರನ್ನು ಡಿ.ಕೆ. ಶಿವಕುಮಾರ್ ಬಳಿ ಕಳಿಸಲಾಗಿದೆ. ಆದರೆ, ಇಲ್ಲಿಯೂ ನುಗ್ಗಿದ ಆಪರೇಷನ್ ಕಮಲ ತಂಡ, ನೋಟಿನ ಮೂಲಕ ವೋಟು ಖರೀದಿಸಲು ಯತ್ನ ನಡೆಸಿದ್ದು, ಈ ಯತ್ನವನ್ನು ವಿಫಗೊಳ್ಳುವಂತೆ ಮಾಡಲಾಗಿದೆ.
ಈ ನಡುವೆ ಬಿಡದಿ ರೆಸಾರ್ಟ್ನಿಂದ ಕಾಂಗ್ರೆಸ್ ಶಾಸಕರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಾನುವಾರ ಭೇಟಿ ಮಾಡಿದ್ದು, ಈ ಭೇಟಿ ಬಳಿಕ ಬಿಡದಿಯಿಂದ ಬೆಂಗಳೂರಿನಲ್ಲಿರುವ ಖಾಸಗಿ ಹೋಟೆಲ್ಗೆ ಶಾಸಕರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಒಡಿಶಾ ಕಾಂಗ್ರೆಸ್ ಶಾಸಕರು ಭಾನುವಾರ ಸಂಜೆ ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿದರು.
ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ ರಾಜ್ಯಸಭಾ ಚುನಾವಣೆ ಕುರಿತು ಚರ್ಚಿಸಲಾಯಿತು ಎಂದು ತಿಳಿದುಬಂದಿದೆ. ಈ ವೇಳೆ ಕೊರಾಪುಟ್ ಲೋಕಸಭಾ ಕ್ಷೇತ್ರದ ಸಂಸದ ಸಪ್ತಗಿರಿ ಶಂಕರ್ ಉಲಾಕಾ ಹಾಗೂ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭಕ್ತ ಚರಣ್ ದಾಸ್ ಕೂಡ ಶಾಸಕರೊಂದಿಗೆ ಇದ್ದರು ಎಂದು ತಿಳಿದುಬಂದಿದೆ.
ಭೇಟಿ ಬಳಿಕ ಭದ್ರತೆಯ ದೃಷ್ಟಿಯಿಂದ ಹಾಗೂ ಒಡಿಶಾಗೆ ತೆರಳಲು ಅನುಕೂಲವಾಗುವಂತೆ ಶಾಸಕರನ್ನು ಬೆಂಗಳೂರಿನ ಖಾಸಗಿ ಹೋಟೆಲ್ ವೊಂದಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಹೋಟೆಲ್ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ನಡೆದ ಮಾತುಕತೆಗಳು ಶಾಸಕರ ಮನೋಬಲವನ್ನು ಹೆಚ್ಚಿಸಿವೆ ಎನ್ನಲಾಗುತ್ತಿದ್ದು, ಇದರ ಜೊತೆಗೆ ಒಡಿಶಾದಲ್ಲಿ ಇರುವ ಪಕ್ಷದ ಕಾರ್ಯಕರ್ತರಲ್ಲಿಯೂ ಹೊಸ ಉತ್ಸಾಹ ಮೂಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜು ಜನತಾ ದಳ ಮೈತ್ರಿ ಅಭ್ಯರ್ಥಿ ಡಾ. ದತ್ತೇಶ್ವರ ಹೊತಾ ಅವರಿಗೆ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಬೆಂಬಲ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.
ಈ ಕುರಿತು ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಶಾಸಕರು ಸೋಮವಾರ ಬೆಳಿಗ್ಗೆ ಭುವನೇಶ್ವರಕ್ಕೆ ತೆರಳಿ ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ ಎಂದು ತಿಳಿಸಿದ್ದಾರೆ.