ನವದೆಹಲಿ: ಯುಗಾದಿ ಶುಭಾಶಯ ಕೋರುವ ನೆಪದಲ್ಲಿ ಕೇಂದ್ರದ ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ಭೇಟಿ ಮಾಡಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಾಲ್ವರು ಸದಸ್ಯರ ಅವಧಿ ಜೂನ್ನಲ್ಲಿ ಮುಗಿಯಲಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸದಸ್ಯತ್ವ ಮುಗಿಯಲಿದೆ. ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ನಿರಾಯಾಸವಾಗಿ ಗೆಲ್ಲಲಿದೆ. ಜೆಡಿಎಸ್ ನೆರವಿಲ್ಲದೆ ಇನ್ನೊಂದು ಸ್ಥಾನ ಗೆಲ್ಲುವಷ್ಟು ಮತಗಳನ್ನು ಬಿಜೆಪಿ ಹೊಂದಿದೆ.
ಈ ಸ್ಥಾನವನ್ನು ದೇವೇಗೌಡರಿಗೆ ಬಿಟ್ಟುಕೊಡಬೇಕು ಎಂಬುದು ಜೆಡಿಎಸ್ ನಾಯಕರ ಅಪೇಕ್ಷೆ. ಆದರೆ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರನ್ನು ರಾಜ್ಯಸಭೆಗೆ ಕಳುಹಿಸಬೇಕು ಎಂಬುದು ಬಿ.ಎಸ್.ಯಡಿಯೂರಪ್ಪ ಕುಟುಂಬದ ಹಂಬಲ. ಈ ವಿಷಯದ ಬಗ್ಗೆಯೂ ಕುಮಾರಸ್ವಾಮಿ ಅವರು ಶಾ ಅವರಲ್ಲಿ ಪ್ರಸ್ತಾಪಿಸಿದರು ಎಂದು ಮೂಲಗಳು ಹೇಳಿವೆ.
ವಿಧಾನ ಪರಿಷತ್ನ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂದರ್ಭದಲ್ಲಿ ಬಿಜೆಪಿ ರಾಜ್ಯ ನಾಯಕರು ಸೌಜನ್ಯಕ್ಕೂ ಅಭಿಪ್ರಾಯ ಕೇಳಿಲ್ಲ. ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಜೆಡಿಎಸ್ ಈ ಹಿಂದೆ ಜಯ ಗಳಿಸಿತ್ತು. ಈ ಸಲ ಈ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಮನವಿ ಮಾಡಿತ್ತು.
ಆದರೆ, ಬಿಜೆಪಿ ಪ್ರಮುಖರ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸದೆಯೇ ಸಂಭಾವ್ಯರ ಹೆಸರನ್ನು ವರಿಷ್ಠರಿಗೆ ಕಳುಹಿಸಲಾಗಿತ್ತು. ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನಷ್ಟೇ ನಮ್ಮ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಇಂತಹ ಧೋರಣೆ ಸರಿಯಲ್ಲ ಎಂದೂ ಕುಮಾರಸ್ವಾಮಿ ಅವರು ಶಾ ಗಮನಕ್ಕೆ ತಂದರು ಎಂದು ಮೂಲಗಳು ಹೇಳಿವೆ.