ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಶುಕ್ರವಾರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಮತ್ತೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ನಮ್ಮ ಕಾಂಗ್ರೆಸ್ ಪಕ್ಷದೊಳಗೆ ಯಾವುದೇ ನಿರ್ಧಾರವನ್ನು ಹೈಕಮಾಂಡ್ ಮಟ್ಟದಲ್ಲಿ, ಅಂದರೆ ತಾವು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ—ಒಟ್ಟಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳು ಮುಂದುವರಿದಿರುವ ನಡುವೆಯೇ ಅವರು ಈ ಹೇಳಿಕೆ ನೀಡಿದ್ದು ಸ್ಪಷ್ಟ ಸಂದೇಶ ರವಾನಿಸುವ ಪ್ರಯತ್ನ ಮಾಡಿದ್ದಾರೆ.
ಇಂದು ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಖರ್ಗೆ, ತಕ್ಷಣ ನಾಯಕತ್ವ ಬದಲಾವಣೆ ಆಗಲಿದೆ ಎಂಬ ವರದಿಗಳು ಕೇವಲ ಊಹಾಪೋಹಗಳಷ್ಟೇ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಪ್ರತಿ ದಿನ ಬದಲಾವಣೆಯ ಮಾತುಗಳು ಕೇಳಿಬರುತ್ತಿವೆ, ಹೀಗಾಗಿ ನಾನು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಲು ಬಯಸುತ್ತೇನೆ—ನಾನು AICC ಅಧ್ಯಕ್ಷನಾಗಿ, ಸೋನಿಯಾ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿ( CPP), ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ನಾವು ಮೂವರೂ ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವು ಪ್ರಮುಖ ಸಂಘಟನೆ ಹಾಗೂ ರಾಜಕೀಯ ವಿಚಾರಗಳಲ್ಲಿ ನಿರ್ಧಾರ ಕೈಗೊಳ್ಳುವ ಮೊದಲು ಹಿರಿಯ ನಾಯಕರೊಂದಿಗೆ ಸಮಗ್ರ ಚರ್ಚೆ ನಡೆಸುವ ವ್ಯವಸ್ಥಿತ ವಿಧಾನವನ್ನು ಅನುಸರಿಸುತ್ತದೆ ಎಂದು ಒತ್ತಿಹೇಳಿದರು.
ಹೈಕಮಾಂಡ್ ಒಳಗೂ ಹಾಗೂ ಇತರ ಹಿರಿಯ ನಾಯಕರೊಂದಿಗೆ ಚರ್ಚೆಗಳು ನಡೆಯುತ್ತವೆ. ಯಾವುದೇ ಕ್ರಮ ಕೈಗೊಳ್ಳುವ ಮೊದಲು ಅದರ ಪರಿಣಾಮಗಳನ್ನು ನಾವು ಸೂಕ್ಷ್ಮವಾಗಿ ಪರಿಶೀಲಿಸುತ್ತೇವೆ. ದಿನಾಂಕ ನಿಗದಿಯಾದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಈಗಾಗಲೇ ಯಾವುದೇ ದಿನಾಂಕ ನಿಗದಿಯಾಗಿಲ್ಲ, ಆದ್ದರಿಂದ ಊಹಾಪೋಹಗಳಿಗೆ ಅರ್ಥವಿಲ್ಲ ಎಂದು ಹೇಳಿದರು.
ನಿರ್ಧಾರ ತೆಗೆದುಕೊಳ್ಳುವಾಗ ಅದು ಕರ್ನಾಟಕದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡೇ ಇರುತ್ತದೆ, ಪಕ್ಷದ ಅಂತಿಮ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು ಎಂದು ಮನವಿ ಮಾಡಿದರು.
ವದಂತಿಗಳನ್ನು ನಂಬಬೇಡಿ
ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡುವಂತೆ ನಾನು ನಿಮ್ಮಲ್ಲಿ ಮಾಧ್ಯಮದವರಲ್ಲಿ ವಿನಂತಿಸುತ್ತೇನೆ. ನಾವು ನಮ್ಮ ಮಾತಿಗೆ ಬದ್ಧರಾಗಿದ್ದೇವೆ, ಯಾವುದೇ ನಿರ್ಧಾರವೂ ರಾಜ್ಯದ ಹಿತಾಸಕ್ತಿಯನ್ನು ಪ್ರಧಾನವಾಗಿಟ್ಟುಕೊಂಡೇ ತೆಗೆದುಕೊಳ್ಳಲಾಗುತ್ತದೆ. ಹೈಕಮಾಂಡ್ನ ಅಂತಿಮ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು ಎಂದು ಅವರು ಹೇಳಿದರು.
ನಿನ್ನೆ ಕೂಡ ಖರ್ಗೆ ಅವರು ಕರ್ನಾಟಕದ ನಾಯಕತ್ವದ ಅನಿಶ್ಚಿತತೆಗೆ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಹೇಳಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರಿಯುವಂತೆ ಅವಕಾಶ ನೀಡುವುದಾಗಲೀ ಅಥವಾ ಸಂಘಟನಾ ಮೌಲ್ಯಮಾಪನದ ಆಧಾರದ ಮೇಲೆ ಸಚಿವ ಸಂಪುಟ ಪುನಾರಚನೆ ಮಾಡುವುದಾಗಲೀ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿದ್ದರು.
ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವೆ ನಾಯಕತ್ವದ ವಿಷಯದಲ್ಲಿ ಆಂತರ್ಯದಲ್ಲಿ ಭಿನ್ನಾಭಿಪ್ರಾಯಗಳು ಕಂಡುಬರುತ್ತಿವೆ. 2023ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದವಾಗಿದೆ ಎಂದು ಹೇಳಲಾಗುತ್ತಿದ್ದು, ಅದರ ಆಧಾರದ ಮೇಲೆ ಇನ್ನು ಉಳಿದ ಅವಧಿಗೆ ಡಿ ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಬೇಡಿಕೆಗಳು ಪಕ್ಷದ ಕೆಲವರಿಂದ ಕೇಳಿಬರುತ್ತಿದೆ.