ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳು ಗರಿಗೆದರಿರುವ ನಡುವೆಯೇ, ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ.
ಕೊಪ್ಪಳ ತಾಲೂಕಿನ ಕೊಳೂರು-ಕಾತ್ರಳ್ಳಿ ಗ್ರಾಮದಲ್ಲಿ ಗವಿಮಠ ಮಹಿಳಾ ಪಿಯು ಕಾಲೇಜು ಮತ್ತು ವಸತಿ ನಿಲಯ ಉದ್ಘಾಟನಾ ಕಾರ್ಯಕ್ರಮದ ಬಳಿಕ ರಾಯರೆಡ್ಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಕ್ಷಣದಲ್ಲಿಯೇ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಶ್ನೆಯೇ ಇಲ್ಲ. ಅವರು ಉಳಿದಿರುವ ಅವಧಿಗೂ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಹೇಳಿದರು.
ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಂಡರೆ, ಮೊದಲು ಶಾಸಕರ ಅಭಿಪ್ರಾಯ ಪಡೆಯಬೇಕು. ಹಾಗೆ ಆಗಿದ್ದೇ ಆದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದನ್ನು ಶಾಸಕರು ಪರಿಗಣಿಸಬಹುದು ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದನ್ನು ನಾವು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ನಾನು ಯಾರೊಬ್ಬರ ಪರವೂ ಇಲ್ಲ, ನಾನು ಕಾಂಗ್ರೆಸ್ ಪಕ್ಷದ ಬೆಂಬಲಿಗ. ಡಿ.ಕೆ. ಶಿವಕುಮಾರ್ ಅವರು ತಾವು ಸಿಎಂ ಆಗಬೇಕೆಂದು ಎಲ್ಲಿಯೂ ಹೇಳಿಕೊಂಡಿಲ್ಲ ಎಂದು ತಿಳಿಸಿದರು.