ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ SIR ಪ್ರಕ್ರಿಯೆಯಲ್ಲಿ 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದೂ ಸೇರಿದಂತೆ ಚುನಾವಣಾ ಆಯೋಗದ ಹಲವು ಕ್ರಮಗಳೇ ಬಿಜೆಪಿ ಗೆಲುವಿಗೆ ಕಾರಣವಾಯಿತು, ಚುನಾವಣಾ ಆಯೋಗ ಬಿಜೆಪಿ ಕೈಯೊಳಗಿದೆ ಎಂದು ಕರ್ನಾಟಕದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಆ ಪಕ್ಷದ ಗೆಲುವಲ್ಲ. ಅದು ಚುನಾವಣಾ ಆಯೋಗದ ಗೆಲುವು. ಚುನಾವಣಾ ಆಯೋಗವನ್ನು ಜೇಬಿನಲ್ಲಿ ಇಟ್ಟುಕೊಂಡು ಚುನಾವಣೆ ನಡೆಸಿದ್ದರು ಎಂದು ಖರ್ಗೆ ಆರೋಪಿಸಿದ್ದಾರೆ. ಈ ಹಿಂದೆ ಮಧ್ಯಪ್ರದೇಶ, ಹರಿಯಾಣದಲ್ಲಿ, ಲೋಕಸಭೆ ಚುನಾವಣೆಯಲ್ಲಿ ಕೂಡ ಹೀಗೆಯೇ ಆಗಿತ್ತು ಎಂದರು.
ಸುಮಾರು ಒಂದು ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. 27 ರಿಂದ 28 ಲಕ್ಷ ಅರ್ಹ ಜನರು ಟ್ರಿಬ್ಯುನಲ್ಗಳಿಗೆ ಅರ್ಜಿ ಸಲ್ಲಿಸಿದರೂ ಅವರ ವಾದವನ್ನು ಆಲಿಸಲಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಶೇ 4ರಷ್ಟು ವ್ಯತ್ಯಾಸದಿಂದ 80 ರಿಂದ 100 ಸ್ಥಾನಗಳ ಮೇಲೆ ಪರಿಣಾಮ ಬೀರಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಇದೇ ರೀತಿಯಲ್ಲಿ ಬಿಜೆಪಿ ಚುನಾವಣಾ ಪ್ರಕ್ರಿಯೆಯನ್ನು ನಿಯಂತ್ರಿಸಿತ್ತು ಎಂದು ಅವರು ಆರೋಪಿಸಿದ್ದಾರೆ. ಕರ್ನಾಟಕದಲ್ಲೂ ಇದೇ ರೀತಿ ಆಗಬಹುದು ಎಂದು ಕೂಡ ಹೇಳಿದರು.
ತಮಿಳು ನಾಡಿನಲ್ಲಿ ನಾವು ಹೆಚ್ಚಿನ ಸ್ಥಾನ ಗೆಲ್ಲುವ ನಿರೀಕ್ಷೆಯಲ್ಲಿದ್ದೆವು. ಜನರು ಅವರ ತೀರ್ಪು ಕೊಟ್ಟಿದ್ದಾರೆ. ನೋಡೋಣ ಮುಂದೆ ಏನಾಗುತ್ತದೆ ಎಂದರು.