ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಪಯಣವನ್ನು ಸ್ಮರಿಸಲು ಬಿಜೆಪಿ ಆಯೋಜಿಸಿರುವ ‘ಅಭಿಮಾನೋತ್ಸವ’ ಕಾರ್ಯಕ್ರಮವನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೀವ್ರವಾಗಿ ಟೀಕಿಸಿದ್ದಾರೆ.
ಇದು ನಿಜವಾದ ಗೌರವ ಸಮಾರಂಭವಲ್ಲ, ರಾಜಕೀಯ ಲಾಭಕ್ಕಾಗಿ ಮಾಡುತ್ತಿರುವ “ರಾಜಕೀಯ ಗಿಮಿಕ್” ಎಂದು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪರನ್ನು ಬಿಜೆಪಿ ಒಳಗೇ ಮೂಲೆಗುಂಪು ಮಾಡಿದ ನಾಯಕರು ಈಗ ಅವರ ಹೆಸರಿನಲ್ಲಿ ದೊಡ್ಡ ಸಮಾರಂಭಗಳನ್ನು ನಡೆಸುತ್ತಿರುವುದು ರಾಜಕೀಯ ವ್ಯಂಗ್ಯ ಎಂದು ಹೇಳಿದರು.
“ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದವರು, ಪಕ್ಷದೊಳಗೆ ಅವರಿಗೆ ಅವಮಾನ ಮಾಡಿದವರೇ ಇಂದು ಅವರ ಹೆಸರಿನಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಇದು ನಿಜವಾದ ಗೌರವವಲ್ಲ ಎಂದು ಟೀಕಿಸಿದರು.
ಯಡಿಯೂರಪ್ಪ ಅವರ ರಾಜಕೀಯ ಕೊಡುಗೆಯನ್ನು ಗೌರವಿಸುವ ಉದ್ದೇಶಕ್ಕಿಂತ ಚುನಾವಣಾ ಲಾಭ ಪಡೆಯುವ ರಾಜಕೀಯ ಲೆಕ್ಕಾಚಾರವೇ ಈ ಕಾರ್ಯಕ್ರಮದ ಹಿಂದಿದೆ. “ಅವರನ್ನು ರಾಜಕೀಯವಾಗಿ ದುರ್ಬಲಗೊಳಿಸಿದವರೇ ಈಗ ಅಭಿಮಾನಿಗಳಂತೆ ವರ್ತಿಸುತ್ತಿದ್ದಾರೆ. ಇದು ಕೇವಲ ಚುನಾವಣಾ ಗಿಮಿಕ್ ಮಾತ್ರ. ರಾಜ್ಯದ ರಾಜಕೀಯದಲ್ಲಿ ಯಡಿಯೂರಪ್ಪ ಅವರಿಗೆ ವಿಶಿಷ್ಟ ಸ್ಥಾನವಿದೆ. ಆದರೆ, ಅವರ ಹೆಸರನ್ನು ಬಳಸಿಕೊಂಡು ಕೆಲವು ನಾಯಕರು ತಮ್ಮ ರಾಜಕೀಯ ಬಲ ಹೆಚ್ಚಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ತಿಳಿಸಲಿದರು.
ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿಗೆ ಅಧಿಕಾರದಲ್ಲಿರುತ್ತಾರೆ ಎಂಬ ಹೇಳಿಕೆಗೆ ಜಾರಿಕಿಹೊಳಿಯವರು ಬೆಂಬಲ ವ್ಯಕ್ತಪಡಿಸಿದರು.
ಸಿದ್ದರಾಮಯ್ಯರನ್ನು ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಈ ವಿಚಾರದಲ್ಲಿ ಅನಗತ್ಯ ಚರ್ಚೆಗಳ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ನಾವು ಎಲ್ಲರೂ ಅದನ್ನು ಪಾಲಿಸಲು ಬದ್ಧರಾಗಿದ್ದೇವೆ,” ಎಂದು ತಿಳಿಸಿದರು.