ಬೆಳಗಾವಿ: ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು “ಮುಂದಿನ ಸಿಎಂ” ಎಂದು ಬಿಂಬಿಸುವ ಹೋರ್ಡಿಂಗ್ ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಚೆನ್ನಮ್ಮ ವೃತ್ತದಲ್ಲಿ ಕಾಣಿಸಿಕೊಂಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮತ್ತೆ ಆರಂಭವಾಗುವಂತೆ ಮಾಡಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಕೆ ಶಿವಕುಮಾರ್ ಜನ್ಮದಿನದ ಶುಭಾಶಯದ ಹೆಸರಿನಲ್ಲಿ ಈ ಬೃಹತ್ ಬ್ಯಾನರ್'ವೊಂದನ್ನು ಹಾಕಿಸಿದ್ದಾರೆ.
ಆದರೆ ಬ್ಯಾನರ್ನಲ್ಲಿ “Next Chief Minister” ಎಂಬ ಪದ ಬಳಕೆಯಾಗಿರುವುದು ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಂದುವರಿಸಬೇಕು ಎಂಬ ಒತ್ತಾಯ ಹಲವು ಕಾಂಗ್ರೆಸ್ ಶಾಸಕರಿಂದ ಕೇಳಿಬರುತ್ತಿರುವ ಸಮಯದಲ್ಲೇ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತು ಹಲವು ಬಾರಿ ಊಹಾಪೋಹಗಳು ಕೇಳಿಬಂದಿದ್ದವು.
ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರವಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಿರಂತರವಾಗಿ ಸದ್ದು ಮಾಡುತ್ತಲೇ ಇದೆ. ಆದರೆ, ಪಕ್ಷದ ಹೈಕಮಾಂಡ್ ಈ ಕುರಿತು ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.
ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಬಣದಿಂದಲೇ ಡಿಕೆ ಶಿವಕುಮಾರ್ ಅವರನ್ನು “ಮುಂದಿನ ಸಿಎಂ” ಎಂದು ಬಹಿರಂಗವಾಗಿ ಬಿಂಬಿಸಿರುವುದು ಹಲವು ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಅಳವಡಿಸಲಾದ ಈ ಬೃಹತ್ ಹೋರ್ಡಿಂಗ್ ಸಾರ್ವಜನಿಕರು ಹಾಗೂ ರಾಜಕೀಯ ವಲಯದ ಗಮನ ಸೆಳೆದಿದ್ದು, ಕಾಂಗ್ರೆಸ್ ಒಳಗಿನ ಶಕ್ತಿ ಸಮೀಕರಣಗಳ ಕುರಿತು ಹೊಸ ಚರ್ಚೆ ಹುಟ್ಟುಹಾಕಿದೆ.