ಬೆಂಗಳೂರು: ಜೂನ್ 18ರಂದು ನಡೆಯಲಿರುವ ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಮುನ್ನ, ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಸುಪ್ರಿಯಾ ಶ್ರೀನಾಟೆ ಮತ್ತು ಪವನ್ ಖೇರಾ ಅವರ ಹೆಸರುಗಳು ರಾಜ್ಯದಿಂದ ನಾಮನಿರ್ದೇಶನಕ್ಕೆ ಭಾರೀ ಚರ್ಚೆಗೆ ಗ್ರಾಸವಾಗಿವೆ.
ಕಾಂಗ್ರೆಸ್ ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ನಿರೀಕ್ಷೆಯಿರುವ ಹಿನ್ನೆಲೆ, 2023ರ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕ ಕಾಂಗ್ರೆಸ್ ಘಟಕದೊಂದಿಗೆ ಇಬ್ಬರೂ ನಾಯಕರು ಆಕ್ರಮಣಕಾರಿ ಪ್ರಚಾರ ನಡೆಸಿದ್ದರಿಂದ ಅವರಿಗೆ ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ.
ಈ ನಡುವೆ, ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರ ಹೆಸರೂ ರಾಜ್ಯಸಭೆ ನಾಮನಿರ್ದೇಶನಕ್ಕೆ ಕೇಳಿಬರುತ್ತಿದೆ. ಜೂನ್ 30ರಂದು ಎಂಎಲ್ಸಿ ಹುದ್ದೆಯಿಂದ ನಿವೃತ್ತಿಯಾಗಲಿರುವ ಬಿ ಕೆ ಹರಿಪ್ರಸಾದ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಶಾಶ್ವತ ಸದಸ್ಯರಾಗಿದ್ದು, ಎಐಸಿಸಿ ಹರಿಯಾಣ ಉಸ್ತುವಾರಿಯೂ ಆಗಿದ್ದಾರೆ. ಸಿದ್ದರಾಮಯ್ಯ ಸಚಿವ ಸಂಪುಟ ಪುನಾರಚನೆ ನಡೆದರೆ ಅವರು ಸಚಿವ ಸ್ಥಾನಕ್ಕೂ ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪಕ್ಷದ ಒಳವಲಯದ ಕೆಲವರು, ಸುಪ್ರಿಯಾ ಶ್ರೀನಾಟೆ ಮತ್ತು ಪವನ್ ಖೇರಾ ಅವರನ್ನು ಅವರ ರಾಜ್ಯಗಳಿಂದಲೇ ರಾಜ್ಯಸಭೆಗೆ ನಾಮನಿರ್ದೇಶನ ಮಾಡಬೇಕು ಹಾಗೂ ಕರ್ನಾಟಕದ ನಾಯಕರಿಗೆ ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬಿ ಕೆ ಹರಿಪ್ರಸಾದ್ ಸಚಿವ ಸಂಪುಟ ಪುನಾರಚನೆಯಲ್ಲಿ ಸಚಿವರಾಗುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದ್ದಾರೆ.
ರಾಜ್ಯಸಭಾ ನಾಮನಿರ್ದೇಶನಕ್ಕೆ ಪರಿಗಣಿಸಲ್ಪಡಬಹುದಾದ ಇತರ ಆಕಾಂಕ್ಷಿಗಳಲ್ಲಿ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಮೋಹನ್ ಕಟಾರ್ಕಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಮಾಜಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ, ಮಾವು ಅಭಿವೃದ್ಧಿ ನಿಗಮ ಅಧ್ಯಕ್ಷ ಡಾ. ಬಿ.ಸಿ. ಮುದ್ದುಗಂಗಾಧರ್ ಹಾಗೂ ಮಾಜಿ ಕೇಂದ್ರ ಸಚಿವ ಕೆ ರೆಹಮಾನ್ ಖಾನ್ ಅವರ ಪುತ್ರ ಮನ್ಸೂರ್ ಅಲಿ ಖಾನ್ ಅವರ ಹೆಸರುಗಳೂ ಸೇರಿವೆ. 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಮನ್ಸೂರ್ ಅಲಿ ಖಾನ್ ಸೋತಿದ್ದರು.