ಬೆಂಗಳೂರು: ದೆಹಲಿಯಿಂದ ರಾಜಧಾನಿಗೆ ಮರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಹಾಗೂ ರಾಜ್ಯ ರಾಜಕೀಯ ವಲಯದಲ್ಲಿನ ಬೆಳವಣಿಗೆಗಳು ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ವಾಪಸ್ ಆದ ಬೆನ್ನಲ್ಲೇ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಕಳೆದ ತಡರಾತ್ರಿ ಸಭೆ ನಡೆದಿದೆ.
ಮಧ್ಯರಾತ್ರಿ 12 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯನವರನ್ನು ಸಚಿವರಾದ ಕೃಷ್ಣಬೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಅವರು ಬರಮಾಡಿಕೊಂಡರು. ನಂತರ ಮುಖ್ಯಮಂತ್ರಿಗಳ ಕಾರಿನಲ್ಲೇ ಸಚಿವ ಜಮೀರ್ ಅಹಮದ್ ಖಾನ್ ಮತ್ತು ಶಾಸಕ ಪೊನ್ನಣ್ಣ ಅವರು ಸಿಎಂ ನಿವಾಸಕ್ಕೆ ಆಗಮಿಸಿದರು.
ಸಿಎಂ ಮನೆಗೆ ಬಂದ ನಂತರ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ಬೈರತಿ ಸುರೇಶ್, ಡಾ. ಎಂ.ಸಿ. ಸುಧಾಕರ್, ಶಾಸಕರಾದ ಅಶೋಕ್ ಪಟ್ಟಣ್ ಹಾಗೂ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಪ್ರಮುಖ ನಾಯಕರು ಆಗಮಿಸಿ ಸಿಎಂ ಜೊತೆ ಕಾವೇರಿ ನಿವಾಸದಲ್ಲಿ ಮಾತುಕತೆ ನಡೆಸಿದರು. ತಡರಾತ್ರಿ ನಡೆದ ಈ ಸಭೆಯ ಬಳಿಕ ನಾಯಕರು ಸಿಎಂ ನಿವಾಸದಿಂದ ನಿರ್ಗಮಿಸಿದರು.
ಇಂದೂ ನಡೆಯಲಿದೆ ಸಭೆ
ಹೈಕಮಾಂಡ್ ನಾಯಕರ ಜೊತೆ ದೆಹಲಿಯಲ್ಲಿ ನಡೆದ ಮಾತುಕತೆ ಹಾಗೂ ಅಲ್ಲಿನ ಪ್ರಮುಖ ಬೆಳವಣಿಗೆಗಳ ಕುರಿತು ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ. ಸಿಎಂ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಆಪ್ತ ವಲಯದಲ್ಲಿ ಆತಂಕ ಮನೆಮಾಡಿದ್ದು, ತಮ್ಮ ಮುಂದಿನ ರಾಜಕೀಯ ಭವಿಷ್ಯ ಹಾಗೂ ಮುಂದಿನ ಕಾನೂನಾತ್ಮಕ ಅಥವಾ ರಾಜಕೀಯ ನಡೆಗಳ ಕುರಿತು ಚರ್ಚಿಸಲು ಇಂದು ಕೂಡ ಆಪ್ತ ಸಚಿವರಿಗೆ ಬರುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಇಂದಿನ ಸಭೆಯೂ ತೀವ್ರ ಮಹತ್ವ ಪಡೆದುಕೊಂಡಿದೆ.
ಪ್ರಸ್ತುತ ಮುಖ್ಯಮಂತ್ರಿಗಳ ನಿವಾಸದ ಹೊರಗೆ ತೀವ್ರ ಭದ್ರತೆ ಕಲ್ಪಿಸಲಾಗಿದೆ.