ಹಾಸನ: ಹಾಸನ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡಿ ಎಂದು ಸಂಸದ ಶ್ರೇಯಸ್ ಪಟೇಲ್ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.
ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಕೆ.ಎಂ.ಶಿವಲಿಂಗೇಗೌಡ ಅವರು ಏಕೈಕ ಕಾಂಗ್ರೆಸ್ ಶಾಸಕರಾಗಿದ್ದಾರೆ. ಅತ್ಯಂತ ಸವಾಲಿನ ರಾಜಕೀಯ ಪರಿಸ್ಥಿತಿಯಲ್ಲಿಯೂ ಅವರು ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾಂಗ್ರೆಸ್ ಪರವಾಗಿ ಬೆಂಬಲ ನೀಡಿದ್ದಾರೆ.
ಹಾಸನದಲ್ಲಿ ಜೆಡಿಎಸ್ ಹಾಗೂ ಬಿಜೆಪಿಗೆ ಬಲವಾದ ಟಕ್ಕರ್ ನೀಡಲು ಶಿವಲಿಂಗೇಗೌಡರಂತಹ ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮನವಿಗೆ ಸ್ಪಂದಿಸಬೇಕೆಂದು ಸಂಸದ ಶ್ರೇಯಸ್ ಪಟೇಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರವನ್ನು ಕಾಂಗ್ರೆಸ್ ಮಡಿಲಿಗೆ ತರುವಲ್ಲಿ ಶಿವಲಿಂಗೇಗೌಡರ ಪಾತ್ರ ಮಹತ್ವದ್ದಾಗಿದೆ. ಅವರ ಕಠಿಣ ಪರಿಶ್ರಮ, ಪಕ್ಷದ ಮೇಲಿನ ನಿಷ್ಠೆ ಹಾಗೂ ಸಂಘಟನಾ ಶಕ್ತಿಯಿಂದ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದನ ಪತ್ರದಲ್ಲಿ ಮನವಿ ಮಾಡಿದ್ದಾರೆ.