ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಪ್ರಮುಖ ನಾಯಕರು ಗೈರು ಆಗಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಆಪ್ತ ವಲಯ ಛಿದ್ರವಾಗುತ್ತಿದೆಯೇ ಎಂಬ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ರಜತ ಮಹೋತ್ಸವ ಹಾಗೂ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಪರಮ ಆಪ್ತರಾದ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಗೈರಾಗಿರುವುದು ರಾಜಕೀಯ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ರಾಜ್ಯಾದ್ಯಂತ ಬೃಹತ್ ಅಹಿಂದ ಚಳವಳಿಯನ್ನು ರೂಪಿಸಿ, ಸಿದ್ದರಾಮಯ್ಯ ಅವರ ರಾಜಕೀಯ ಶಕ್ತಿಯನ್ನಾಗಿ ಬೆಳೆಸುವಲ್ಲಿ ಸತೀಶ್ ಜಾರಕಿಹೊಳಿ ಮತ್ತು ಡಾ. ಎಚ್.ಸಿ. ಮಹದೇವಪ್ಪ ಪ್ರಮುಖ ಪಾತ್ರ ವಹಿಸಿದ್ದರು. ಹಳೆ ಮೈಸೂರು ಭಾಗದಲ್ಲಿ ಮಹಾದೇವಪ್ಪ ಹಾಗೂ ಮುಂಬೈ-ಕರ್ನಾಟಕ ಭಾಗದಲ್ಲಿ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರ ಬಲಗೈ ಬಂಟರಂತೆ ನಿಂತು ಚಳವಳಿಯನ್ನು ಮುನ್ನಡೆಸಿದ್ದರು. ಇದೀಗ ಅಹಿಂದ ಚಳವಳಿಯ ಮೂಲ ರೂವಾರಿಗಳಿಗೇ ಆಹ್ವಾನ ನೀಡಿಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.
'ಸಮಾವೇಶಕ್ಕೆ ಯಾವುದೇ ಆಹ್ವಾನ'
ಹಿಂದುಳಿದ ವರ್ಗಗಳ ಸಮಾವೇಶಕ್ಕೆ ಗೈರು ವಿಚಾರವಾಗಿ ಗರಂ ಆಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ 'ಅಹಿಂದ ಯಾರ ಆಸ್ತಿಯೂ ಅಲ್ಲ' ಎಂದು ಹೇಳಿದ್ದಾರೆ.
ನನಗೆ ಈ ಸಮಾವೇಶಕ್ಕೆ ಯಾವುದೇ ಆಹ್ವಾನ ಬಂದಿರಲಿಲ್ಲ, ಹೀಗಾಗಿ ನಾನು ಹೋಗಿಲ್ಲ ಎಂದು ಸತೀಶ್ ಜಾರಕಿಹೊಳಿ ಅವರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
ಅಹಿಂದ ಒಬ್ಬರಿಂದಲೇ ಆಗಿಲ್ಲ
ಇನ್ನು ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಅಂತರಕಾಯ್ದುಕೊಂಡಿರುವ ಎಚ್.ಸಿ.ಮಹದೇವಪ್ಪ ಅವರು ಸಹ ಗರಂ ಆಗಿದ್ದು, ಅಹಿಂದ ಒಬ್ಬರಿಂದಲೇ ಆಗಿಲ್ಲ ಎಂದು ಹೇಳು ಮೂಲಕ ಸಮಾವೇಶಕ್ಕೆ ಮಾರ್ಮಿಕವಾಗಿ ಟಾಂಗ್ ಕೊಟ್ಟಿದ್ದಾರೆ.
ಮೊದಲು ಹುಬ್ಬಳ್ಳಿಯಲ್ಲಿ ಅಹಿಂದ ಆಯ್ತು, ನಾನೊಬ್ಬನೇ ಕುಳಿತು ರೂಪಿಸಿದ್ದೆ. ಬರೀ ಭಾಷಣ ಮಾಡಿ ಹೋಗುವುದಲ್ಲ ಅಥವಾ ಸಭೆ ಸೇರಿ ನಿರ್ಣಯ ಮಾಡುವುದರಿಂದ ನಾಯಕತ್ವ ಬರಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಇದೆಲ್ಲ ನಡೆಯುವುದಿಲ್ಲ. ದೇಶವನ್ನು ಹೇಗೆ ಕಟ್ಟಬೇಕು ಎಂಬುದು ಮುಖ್ಯ. ಯಾರಿಗೆ ಬದ್ಧತೆ ಇದೆಯೋ ಅವರು ಚಳವಳಿಯನ್ನು ಮುನ್ನಡೆಸಿಕೊಂಡು ಹೋಗುತ್ತಾರೆ ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ಅಹಿಂದ ಚಳವಳಿ ಮೂಲಕವೇ ನಾವೆಲ್ಲ ಒಂದೇ ಎಂದು ಗಟ್ಟಿಯಾಗಿ ಹೇಳುತ್ತಿದ್ದ ಟೀಂನಲ್ಲಿ ಈಗ ಬಿರುಕು ಸ್ಪಷ್ಟವಾಗಿ ಕಾಣಿಸುತ್ತಿದೆ.