ಬಳ್ಳಾರಿ: ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಭರ್ಜರಿಯಾಗಿ 8ನೇ ದಿನಕ್ಕೆ ಕಾಲಿಟ್ಟಿದ್ದು, ಕೊನೆಯ ದಿನ ಸೆಪ್ಟೆಂಬರ್ 10ರಂದು ಬಳ್ಳಾರಿ ನಗರವನ್ನು ತಲುಪಲಿದ್ದು, ಈ ವೇಳೆ ದೊಡ್ಡ ಸಮಾರೋಪ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಈ ಸಮಾವೇಶಕ್ಕೆ ಬಳ್ಳಾರಿಯ ಮುನ್ಸಿಪಲ್ ಶಾಲಾ ಮೈದಾನವನ್ನು ಬಳಸಲು ಶಾಲಾ ಶಿಕ್ಷಣ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯು ಅಧಿಕೃತವಾಗಿ ಅನುಮತಿ ನಿರಾಕರಿಸಿದೆ. ಆ ಕುರಿತ ವರದಿ ಇಲ್ಲಿದೆ:
ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಖಂಡಿಸಿ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಾದಯಾತ್ರೆಯು ಸೆಪ್ಟೆಂಬರ್ 10 ರಂದು ಬಳ್ಳಾರಿಯನ್ನು ತಲುಪಲಿದ್ದು, ಅಂದು ಮಧ್ಯಾಹ್ನ 3 ರಿಂದ ರಾತ್ರಿ 8 ಗಂಟೆಯವರೆಗೆ ಸಮಾರೋಪ ಸಮಾವೇಶ ನಡೆಸಲು ಬಿಜೆಪಿ ನಾಯಕರು ಅನುಮತಿ ಕೋರಿದ್ದರು. ಆದರೆ ಶಾಲಾ ಶಿಕ್ಷಣ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯು ಮೈದಾನ ನೀಡಲು ಸಮ್ಮತಿಸಿಲ್ಲ.
ಹಾಗಾದ್ರೆ, ಅನುಮತಿ ನಿರಾಕರಣೆಗೆ ಕಾರಣವೇನು?
ಸರ್ಕಾರಿ ಶಾಲಾ-ಕಾಲೇಜುಗಳ ಆವರಣ ಹಾಗೂ ಮೈದಾನಗಳನ್ನು ಖಾಸಗಿ ಸಂಸ್ಥೆಗಳು, ರಾಜಕೀಯ ಪಕ್ಷಗಳು ಅಥವಾ ಯಾವುದೇ ಸಂಘಟನೆಗಳ ಕಾರ್ಯಕ್ರಮಗಳಿಗೆ ನೀಡಬಾರದು ಎಂಬ ನಿಯಮದ ಕಾರಣ ಅನುಮತಿ ನಿರಾಕರಿಸಲಾಗಿದ್ದು, ಶಾಲಾ ಆವರಣದಲ್ಲಿ ಯಾವುದೇ ರೀತಿಯ ರಾಜಕೀಯ ಸಮಾವೇಶಗಳನ್ನು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿರುವ ಬಳ್ಳಾರಿ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಮರು ಉತ್ತರ ನೀಡಿದ್ದಾರೆ.
ಜಾಗ ಹೇಗೆ ಕೊಡಲ್ಲ ನೋಡ್ತೀವಿ...
ಮುಂದುವರೆದು, ಶಿಕ್ಷಣ ಇಲಾಖೆಯ ಈ ಕ್ರಮಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಷಯವಾಗಿ ಮೊದಲು ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಲಾಗಿದ್ದು, ಒಂದು ವೇಳೆ ಅಲ್ಲಿಯೂ ಸಕಾರಾತ್ಮಕ ಸ್ಪಂದನೆ ಸಿಗದಿದ್ದರೆ ಸರ್ಕಾರದ ನಿರ್ಧಾರದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲು ಪಕ್ಷ ತೀರ್ಮಾನಿಸಿದೆ. ಈ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪಾದಯಾತ್ರೆಯ ಅಭೂತಪೂರ್ವ ಜನಬೆಂಬಲವನ್ನು ನೋಡಿ ಕಾಂಗ್ರೆಸ್ ಸರ್ಕಾರ ಹತಾಶೆಯಾಗಿದೆ, ಹೀಗಾಗಿ ಉದ್ದೇಶಪೂರ್ವಕವಾಗಿ ಮೈದಾನ ನಿರಾಕರಿಸಲಾಗುತ್ತಿದ್ದು, "ಜಾಗ ಹೇಗೆ ಕೊಡಲ್ಲ ಎಂಬುದನ್ನು ನಾವೂ ನೋಡುತ್ತೇವೆ" ಎಂದು ಸವಾಲು ಹಾಕಿದ್ದಾರೆ.