ಬಳ್ಳಾರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧು ಗುರುವಾರ ತೀವ್ರ ವಾಗ್ದಾಳಿ ನಡೆಸಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಡಿಕೆಶಿ ಸರ್ಕಾರದ 100 ದಿನಗಳ ಸಾಧನೆ "ಶೂನ್ಯ". ಇದು "ಜಾಹೀರಾತು ಸರ್ಕಾರ" ಎಂದು ಟೀಕಿಸಿದರು.
ಇಂದು ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ಆಯೋಜಿಸಲಾಗಿದ್ದ `ಬಳ್ಳಾರಿ ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ ಅವರು, ಜನ ಈಗಾಗಲೇ ಈ ಸರ್ಕಾರವನ್ನು ಮನೆಗೆ ಕಳುಹಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು.
"ಈ ಸರ್ಕಾರ ಆದಷ್ಟು ಬೇಗ ಮನೆಗೆ ಹೋಗುತ್ತದೆ. ಜನರು ಈಗಾಗಲೇ ಆ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರು ಸಹ ಈ ಸರ್ಕಾರ ಮತ್ತು ಸಿಎಂ ವಿರುದ್ಧ ಮಾತನಾಡುತ್ತಿದ್ದಾರೆ" ಎಂದು ವಿಜಯೇಂದ್ರ ಹೇಳಿದರು.
"ಈ ಭ್ರಷ್ಟ ಮತ್ತು ಜನವಿರೋಧಿ ಸರ್ಕಾರದ ವಿರುದ್ಧ ನಮ್ಮ ಹೋರಾಟ ಆರಂಭವಾಗಿದೆ. ಚುನಾವಣಾ ರಣರಂಗದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ. ಡಿಕೆ (ಶಿವಕುಮಾರ್) ಅಥವಾ ಬಿಕೆ (ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬಿ ಕೆ ಹರಿಪ್ರಸಾದ್) ನಮ್ಮ ಗೆಲುವನ್ನು ತಡೆಯಲು ಸಾಧ್ಯವಿಲ್ಲ. ಬಿಜೆಪಿಗೆ ಜನರ ಆಶೀರ್ವಾದ ಸಿಗುತ್ತದೆ." ಸರ್ಕಾರವು ಯಾವುದೇ ಜನಸ್ನೇಹಿ ಕಾರ್ಯಕ್ರಮಗಳನ್ನು ಪರಿಚಯಿಸುವಲ್ಲಿ ವಿಫಲವಾಗಿದೆ ಮತ್ತು ನಿರುದ್ಯೋಗ ಸಮಸ್ಯೆ ಪರಿಹರಿಸಲು ವಿಫಲವಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.
"ಈ ಸರ್ಕಾರದ ಸಾಧನೆ ಶೂನ್ಯ. ರಾಜ್ಯದ ಜನ ಪ್ರತಿ ಮನೆಯಲ್ಲೂ ಇದನ್ನು ಹೇಳುತ್ತಿದ್ದಾರೆ. ಇದು ಜನಪ್ರಿಯ ಸರ್ಕಾರವಲ್ಲ; ಇದು ಜಾಹೀರಾತು ಸರ್ಕಾರ" ಎಂದು ವಾಗ್ದಾಳಿ ನಡೆಸಿದರು.
ಲಿಂಗಸುಗೂರಿನಿಂದ ಬಳ್ಳಾರಿವರೆಗೆ ಒಂಬತ್ತು ವಿಧಾನಸಭಾ ಕ್ಷೇತ್ರಗಳಲ್ಲಿ 10 ದಿನಗಳ ಕಾಲ ಪಾದಯಾತ್ರೆ ನಡೆಸಲಾಗಿದೆ. ಈ ವೇಳೆ ದಲಿತರು, ಬಡವರು, ರೈತರು ಹಾಗೂ ವಿವಿಧ ವರ್ಗಗಳ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿದ್ದೇವೆ. ಈ ಪಾದಯಾತ್ರೆ ತಮ್ಮ ಹೃದಯ ಹಾಗೂ ಕಣ್ಣುಗಳನ್ನು ತೆರೆಸಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಡವರು, ದೀನದಲಿತರು ಮತ್ತು ತುಳಿತಕ್ಕೊಳಗಾದವರ ಶೋಷಣೆ ಮುಂದುವರೆದಿದೆ. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಳ್ಳುವ ಮೂಲಕ "ತನ್ನ ಬೆನ್ನನ್ನು ತಾನೆ ತಟ್ಟಿಕೊಳ್ಳುತ್ತಿದೆ" ಎಂದರು.
‘ವಂದೇ ಮಾತರಂ’ ಗೀತೆ ಮೊಟಕು
ಕೇಂದ್ರ ಸರ್ಕಾರ ಸಂಪೂರ್ಣ ‘ವಂದೇ ಮಾತರಂ’ ಗೀತೆಯನ್ನು ಹಾಡುವಂತೆ ಸೂಚಿಸಿದ್ದರೂ, ರಾಜ್ಯ ಸರ್ಕಾರ ಕೇವಲ ಎರಡು ಚರಣಗಳನ್ನ ಹಾಡುವಂತೆ ಆದೇಶಿಸಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ವಂದೇ ಮಾತರಂ ಗೀತೆಗೆ ಕತ್ತರಿ ಹಾಕಲಾಗಿದೆ. ಈ ವಿಚಾರವಾಗಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ದಲಿತರಿಗೆ ಸಿಗಲಿ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ ಹೆಚ್ಚಿನ ಅಕ್ರಮ ವಹಿವಾಟಿನ ಹಣವನ್ನು ತಕ್ಷಣವೇ ವಾಪಸ್ ಪಡೆದು ದಲಿತರ ಅಭಿವೃದ್ಧಿಗೆ ಬಳಸಬೇಕು. ಎಸ್ಸಿಪಿ-ಟಿಎಸ್ಪಿ ಯೋಜನೆಯ ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಬೇರೆ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿತ್ತು, ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆ ಮೀಸಲಾತಿ ಸೌಲಭ್ಯಗಳಿಗೆ ಕತ್ತರಿ ಹಾಕಿದೆ ಎಂದು ಆಕ್ರೋಶ ಹೊರಹಾಕಿದರು.