ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿಯ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಚಿವರ ನಿವಾಸಕ್ಕೆ ಆಗಮಿಸಿದ್ದಾರೆ. ಸತೀಶ್ ಬೆನ್ನಿಗೆ ಕೈ ನಾಯಕರು ನಿಂತಿದ್ದು, ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು ಜಾರಕಿಹೊಳಿ ನಿವಾಸಕ್ಕೆ ನಿನ್ನೆ ತಡ ರಾತ್ರಿ ತೆರಳಿ ಮಾತುಕತೆ ನಡೆಸಿದ್ದಾರೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸತೀಶ್ ಅವರ ಬೆಂಗಳೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿರುವ ನಿವಾಸದ ಮೇಲೆ ಎರಡು ದಿನಗಳ ಕಾಲ ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೆ, ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ಅವರಿಗೆ ಸಂಬಂಧಿಸಿದಂತಹ ಸ್ಥಳಗಳ ಮೇಲೂ ದಾಳಿ ನಡೆಸಿದ್ದರು.
ಈ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಟೀಕಿಸಿದೆ. ನಿನ್ನೆ ರಾತ್ರಿ ಕೆಪಿಸಿಸಿ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್, ಸಚಿವರು ಮತ್ತು ಇತರ ನಾಯಕರು ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಈ ನಡುವೆ ಸಿಎಂ ಡಿಕೆ ಶಿವಕುಮಾರ್ ಅವರು ಸಹ ನಿನ್ನೆ ತಡರಾತ್ರಿ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ಅಭಯ ನೀಡಿದ್ದಾರೆ.
ಕುತೂಹಲ ಕೆರಳಿಸಿದ ತಡ ರಾತ್ರಿ ಭೇಟಿ
ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿ ದೊಡ್ಡ ಪ್ರಮಾಣದ ಹಣವನ್ನು ಸೀಜ್ ಮಾಡಿದೆ. ಅಲ್ಲದೆ, ಕೆಲವೊಂದು ಮಹತ್ವದ ದಾಖಲೆಗಳನ್ನು ಸಂಗ್ರಹ ಮಾಡಿದೆ. ಇಡಿ ದಾಳಿ ಮುಕ್ತಾಯಗೊಂಡ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಸೇರಿದಂತೆ ಹಿರಿಯ ಸಚಿವರು, ಶಾಸಕರು ಜಾರಕಿಹೊಳಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಬಳಿಕ ಸ್ವತಃ ಡಿಕೆ ಶಿವಕುಮಾರ್ ಅವರು ತಡ ರಾತ್ರಿ ಒಂದು ಗಂಟೆ ಸುಮಾರಿಗೆ ಸತೀಶ್ ಮನೆಗೆ ಭೇಟಿ ನೀಡಿದ್ದಾರೆ. ಜಾರಕಿಹೊಳಿ ಅವರ ಸರ್ಕಾರಿ ನಿವಾಸಕ್ಕೆ ಆಗಮಿಸಿದ ಡಿಕೆಶಿ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇಡಿ ದಾಳಿಯ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.