ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮಗನನ್ನು ಪ್ರತಿಷ್ಠಾಪಿಸಲು, ಸಹೋದರನ ಪುತ್ರ ಪ್ರಜ್ವಲ್ ರೇವಣ್ಣನನ್ನು ರಾಜಕೀಯವಾಗಿ ಮುಗಿಸಿದರು ಎಂದು ಸಚಿವ ಎಚ್.ಸಿ. ಬಾಲಕೃಷ್ಣ ಅವರು ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.
ಇಂದು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ ಅವರು, ಅವರು ಒಬ್ಬ ಕೇಂದ್ರ ಸಚಿವ ಎಂಬುದನ್ನು ಮರೆತು ಪಂಚಾಯಿತಿ ಸದಸ್ಯರಂತೆ ಮಾತನಾಡುತ್ತಿದ್ದಾರೆ ಎಂದರು.
ನೈಸ್ ಮತ್ತು ಕೆಪಿಎಸ್ಸಿ ಅಕ್ರಮಗಳನ್ನು ಮುಚ್ಚಿಹಾಕಲು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮುನ್ನೆಲೆಗೆ ತರಲಾಗುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆಗ ಪ್ರತಿಕ್ರಿಯಿಸಿದ ಬಾಲಕೃಷ್ಣ ಅವರು, ಪ್ರಜ್ವಲ್ ರೇವಣ್ಣ ವಿಚಾರದ ಬಗ್ಗೆ ಯಾಕೆ ಮಾತನಾಡ್ತಾರೆ? ಅದು ಅಸಹ್ಯ. ಪ್ರಜ್ವಲ್ ಪ್ರಕರಣಕ್ಕೂ, ನೈಸ್-ಕೆಪಿಎಸ್ಸಿಗೂ ಏನು ಸಂಬಂಧ? ಹೀಗೆ ಪದೇ ಪದೇ ಮಾತನಾಡಿಯೇ ಪ್ರಜ್ವಲ್ರನ್ನ ಜೈಲಿಗೆ ಕಳುಹಿಸಿದರು ಎಂದು ತಿರುಗೇಟು ನೀಡಿದರು.
ಪ್ರಜ್ವಲ್ ಜೈಲಲ್ಲೇ ಇರಬೇಕು, ಅವರನ್ನು ರಾಜಕೀಯವಾಗಿ ಮುಗಿಸಿ ತಮ್ಮ ಮಗನನ್ನು ಪ್ರತಿಷ್ಠಾಪನೆ ಮಾಡಬೇಕು ಎನ್ನುವುದೇ ಕುಮಾರಸ್ವಾಮಿ ಅವರ ಅಸಲಿ ಅಭಿಲಾಷೆ ಎಂದು ಬಾಲಕೃಷ್ಣ ಆರೋಪಿಸಿದರು.
ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಹೇಗೆ ಬಂತು ಎಂದು ಅನುಮಾನವಿದ್ದರೆ ಸಿಬಿಐ ತನಿಖೆಗೆ ಪತ್ರ ಬರೆಯಲಿ ಎಂದು ಸವಾಲು ಎಸೆದರು.
ರಾಜ್ಯ ಸರ್ಕಾರದ 100ನೇ ದಿನದ ಸಾಧನಾ ಕಾರ್ಯಕ್ರಮವನ್ನು ಎಚ್ಡಿಕೆ ವ್ಯಂಗ್ಯವಾಡಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪ್ರಪಂಚದಲ್ಲಿ ಕುಮಾರಸ್ವಾಮಿ ಒಬ್ಬರೇ ಮೇಧಾವಿ, ಉಳಿದವರೆಲ್ಲ ದಡ್ಡರು ಎನ್ನುವ ಮನಸ್ಥಿತಿ ಅವರದ್ದು. ನಾನು ಹುಟ್ಟಿದ್ದೇ ಬಡವರಿಗಾಗಿ ಎನ್ನುವ ಅವರ ಮನಸ್ಥಿತಿಯ ಬಗ್ಗೆ ನಾವೇನೂ ಮಾತನಾಡಲು ಸಾಧ್ಯವಿಲ್ಲ ಎಂದರು.