ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷವು ದೇಶವಿರೋಧಿಗಳ ಪರವಾಗಿದ್ದು, ಸದಾ ದೇಶವಿರೋಧಿ ಹಾಗೂ ಸಮಾಜವಿರೋಧಿ ಶಕ್ತಿಗಳನ್ನು ಪ್ರೋತ್ಸಾಹಿಸುತ್ತ ಬಂದಿದೆ ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಕಾರಿದ್ದಾರೆ.
ಉಮರ್ ಖಾಲಿದ್ ಪರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ದೇಶದ ಹಿತಾಸಕ್ತಿಗೆ ಧಕ್ಕೆ ತರುವಂತಹ ದುರುದ್ದೇಶಪೂರಿತ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ವಾಗ್ದಾಳಿ ನಡೆಸಿದರು.
ಮುಂಬೈ ದಾಳಿಯನ್ನು ‘ಕೇಸರಿ ಭಯೋತ್ಪಾದನೆ’ ಎಂದು ಬಿಂಬಿಸಲು ಪ್ರಯತ್ನಿಸಿದ್ದು ಹಾಗೂ ಪಾಕಿಸ್ತಾನದ ಪರ ನಿಲುವು ತಳೆದಿರುವುದು ಇದಕ್ಕೆ ಉದಾಹರಣೆ ಎಂದು ಆರೋಪಿಸಿದರು.
ಯುಎಪಿಎ ಅಡಿ ಜೈಲಿನಲ್ಲಿರುವ ಉಮರ್ ಖಾಲಿದ್ ಪರ ಹರಿಪ್ರಸಾದ್ ಮಾತನಾಡಿರುವುದು ದೇಶವಿರೋಧಿಗಳನ್ನು ಬೆಂಬಲಿಸಿದಂತಾಗಿದೆ. ಉಮರ್ ಖಾಲಿದ್ ಸ್ವತಃ ತಾನು ರಾಷ್ಟ್ರವಾದಿಯಲ್ಲ ಮತ್ತು ದೇಶ ಅಥವಾ ರಾಷ್ಟ್ರೀಯತೆಯಲ್ಲಿ ನಂಬಿಕೆ ಇಲ್ಲ ಎಂದು ಹೇಳಿಕೊಂಡಿದ್ದಾನೆ.
ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸಿರುವ ಆರೋಪ ಎದುರಿಸುತ್ತಿರುವ ಆತ ಇಂದು ಜೈಲಿನಲ್ಲಿದ್ದಾನೆ. ಇಂತಹ ಜೈಲಿನಲ್ಲಿರುವ ದೇಶವಿರೋಧಿಗಳನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್ ಮತಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಹಿಂದೆ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಇಂದು ಅಸ್ತಿತ್ವದಲ್ಲಿಲ್ಲ. ಈಗ ಇರುವುದು ನಕಲಿ ಕಾಂಗ್ರೆಸ್ ಮತ್ತು ನಕಲಿ ಗಾಂಧಿಗಳು. ಅವರಿಗೆ ದೇಶದ ಬಗ್ಗೆ ಕಾಳಜಿಯಿಲ್ಲ, ದೇಶದ ಸಂಸ್ಕೃತಿಯ ಬಗ್ಗೆಯೂ ಪರಿಕಲ್ಪನೆಯಿಲ್ಲ. ದೇಶದ ಮೇಲಿನ ಅಭಿಮಾನ ಇಲ್ಲದ ಕಾರಣ ವಿದೇಶಿ ಶಕ್ತಿಗಳು ಹಾಗೂ ದೇಶದೊಳಗಿನ ದೇಶದ್ರೋಹಿ ಶಕ್ತಿಗಳೊಂದಿಗೆ ಕೈಜೋಡಿಸಿ ದೇಶವಿರೋಧಿ ಕೃತ್ಯಗಳಲ್ಲಿ ತೊಡಗಿದ್ದಾರೆ. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆಯಿಂದ ಇದು ಮತ್ತೊಮ್ಮೆ ಸಾಬೀತಾಗಿದೆ.
ಇದೇ ವೇಳೆ ದೇಶವಿರೋಧಿಗಳ ಪರ ನಿಂತು ಕಾಂಗ್ರೆಸ್ ನಾಯಕರು ತಮ್ಮ ನಿಜಬಣ್ಣವನ್ನು ತೋರಿಸುತ್ತಿದ್ದಾರೆ ಎಂದು ಆರೋಪಿಸಿದ ಬೊಮ್ಮಾಯಿ ಅವರು, ಈ ನಡೆಯನ್ನು “ಅತ್ಯಂತ ನಾಚಿಕೆಗೇಡಿನ ಮತ್ತು ಖಂಡನೀಯ ಎಂದು ಬಣ್ಣಿಸಿದರು. ದೇಶವಿರೋಧಿಗಳನ್ನು ಬೆಂಬಲಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.