ಕಲೆ 
ಪದ್ಯ ಪರಿಷೆ

ಕವನ ಸುಂದರಿ: ಸಂಧ್ಯಾರಾಣಿ: ಸಿರಿಗೌರಿಯ ಶಿವ

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ 


ಸಿರಿಗೌರಿಯ ಶಿವ

ಸಿರಿಗೌರಿ ಎದೆಯಲ್ಲೂ ಇರುತಾಳೆ ಭಾಗೀರತಿ
ತೊರೆದು ಹೋದ ಮೇಲೆ
ತಿರುಗಿ ನೋಡುವುದಿಲ್ಲ
ಅರ್ಧ ದೇಹ ಕೊಟ್ಟವನು, ಅರ್ಧವಾಗಿ ಉಳಿದುಬಿಟ್ಟ
ಉಳಿದರ್ಧಕ್ಕಾಗಿ ಕನಲಿ ಹಂಬಲಿಸುತ್ತಾನೆ ರುದ್ರ
ಜಟೆಯ ತುದಿಯಿಂದ ಕಾಲುಗುರ ಮೊನೆಯವರೆಗೆ
ಧಿಮಿಧಿಮಿ ಧಿಮಿಧಿಮಿ ಹಣೆಯಲ್ಲಿ ಕಣ್ಣುರಿ 
ಸುಡುತಾದೆ ನಿಂತ ನಿಲುವಾರ
ಹಿಮದ ಕಮರಿಯಲ್ಲಿ ಬೆಂಕಿಯ ತಾಂಡವ
ಕೈಲಾಸವೊಂದು ಮಂಜಿನ ಚಿತೆ
ಸುಟ್ಟರೂ ಬೂದಿಯಾಗದ ಹೆಣ್ಣು ಪಾರ್ವತಿ
ಶಿವನ ಮೈತುಂಬಾ ಅವಳದೇ ಚಿತೆ
ಹೊತ್ತು ತಿರುಗುತ್ತಾನೆ ಶಿವ, ಕೈ ಚಾಚಿ ಬೇಡುತ್ತಾನೆ
ಎದೆಯ ಮೇಲಿನ ಶವದ ಭಾರ 
ಇಳಿಸಬಲ್ಲಿರಾ ಯಾರಾರ?
ಕೈಲಾಸಬಿಟ್ಟ ಶಿವ ಮೂಲೋಕ ಅಲೆಯುತ್ತಾನೆ
ಕಳಚಿಬೀಳಲಿ ನೆನಪುಗಳೆಲ್ಲಾ ತುಣುಕು ತುಣುಕಾಗಿ
ಢಮಢಮ ಢಮಢಮ ಡಮರುಗ ಡಿಂಡಿಮ
ನಿಲ್ಲುವಂತಿಲ್ಲ ಕ್ಷಣವಾದರೂ, ನಿಂತ ಮರುಚಣ
ಕಿವಿಯಲ್ಲಿ ಮೊರೆಯುತ್ತದೆ ಕಾತ್ಯಾಯನಿ ಗೆಜ್ಜೆಉಲಿ
ಮರಳಿಬಾರೆ ಗೌರಿ, ಮತ್ತೆ ಮುನಿಯುವುದಿಲ್ಲ
ಶಿವನ ತಾಂಡವದಲ್ಲೂ ಈಗ ಅವಳ ಜಪ
ಅವಳ ಕರೆಯುತ್ತಾನೆ, ಕರೆದೊಯ್ಯೇ
ಎಂದು ದನಿಯೆತ್ತಿ ಕೂಗುತ್ತಾನೆ
ಪರಶಿವನ ಈ ದುಃಖ ಆಡಿ ಮುಗಿಸುವುದಲ್ಲ
ಅತ್ತು ಮರೆಯುವುದಲ್ಲ
ಜಗದಗಲ ಮುಗಿಲಗಲ ಕಡಲಾಳ 
ಅತಳ, ವಿತಳ, ಪಾತಾಳ, ರಸಾತಳ 
ಶಿವನ ಹೆಜ್ಜೆ ಗುರುತು ಬೀಳದ ತಾವಿಲ್ಲ
ಹಗಲಲ್ಲಿ ಸೂರ್ಯ ಹಣೆಗಣ್ಣಲ್ಲಿ ಉರಿಯುತ್ತಾನೆ
ಇರುಳಾಯಿತೆಂದರೆ ಹಣೆಯ ಚಂದಿರನಿಗೆ ಬೆಂಕಿ ಇಕ್ಕುತ್ತಾನೆ
ಉಮೆಯ ಸ್ಪರ್ಶವಿಲ್ಲದ ಮುಡಿಯಲ್ಲಿ ನೂರು ಜಟೆ
ಒಂದೊಂದು ಎಳೆಯಲ್ಲೂ ಫೂತ್ಕರಿಸುವ ಕಾಳನಾಗರ
ಮರ್ತ್ಯವನ್ನೇ ನಂಬಿದ ಲೋಕ
ಆತ್ಮಹತ್ಯೆ ಎನ್ನುತ್ತದೆ, ತಿಳಿಯದೆ ಶಿವನಿಗೆ 
ಗೌರಿ ಬೆಂದದ್ದು ಅವ ಮುಖ ತಿರುಗಿಸಿದಾಗ.
ಹೋಗಿ ಬಾರೆನ್ನಲಿಲ್ಲ, ಬೇಡ ನಿಲ್ಲೆನ್ನಲಿಲ್ಲ
ಬಿಟ್ಟು ಬರಲಿಲ್ಲ,  ಕಾದು ನಿಲ್ಲಲಿಲ್ಲ
ಮುಂಜಾನೆ ತೆಗೆದೆಸೆವ ಜಟೆಯ ಹಳೆ ಹೂವಂತೆ
ಕಳಚಿ ಕೈಬಿಟ್ಟ, ಹೊರಟು ನಿಂತವಳೆಡೆಗೆ ಬೆನ್ನುಕೊಟ್ಟ
ಶಿವನ ಸಿಟ್ಟು ತಾಕದ ಹಿಮಗಿರಿ ತನಯೆಯನ್ನು
ಅವನ ಉಪೇಕ್ಷೆ ಸುಟ್ಟುಹಾಕಿತು
ನೂರು ಮಾತುಗಳು ಕೊಲ್ಲದ ಪ್ರೀತಿಯನು
ಒಂದು ಮೌನ ಕೊಚ್ಚಿ ಮುಗಿಸುವ ಹಾಗೆ
ಹಲುಬುತ್ತಾನೆ ಶಿವ, ಹುಡುಕುತ್ತಾನೆ ಶಿವ
ಶಿವೆಯಿಲ್ಲದ ಶಿವನೆದೆಯಲ್ಲಿ ಆರುವುದಿಲ್ಲ ಸತಿಯ ಚಿತೆ


 



ಕವಯಿತ್ರಿ ಸಂಧ್ಯಾರಾಣಿ ಪತ್ರಕರ್ತೆ, ಲೇಖಕಿ, ಸಿನಿಮಾ ವಿಮರ್ಶಕಿಯೂ ಆಗಿದ್ದಾರೆ. ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆಯವರು. ಕೆ.ಜೆ.ಎಫ್‌ನಲ್ಲಿ ಪದವಿ ಶಿಕ್ಷಣ ಪಡೆದಿರುವ ಇವರು ಪ್ರಸ್ತುತ ಹವ್ಯಾಸಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ.
ಕನ್ನಡದ ಕೆಲವು ಇ-ಪತ್ರಿಕೆಗಳ ಅಂಕಣಕಾರ್ತಿಯಾಗಿರುವ ಇವರು ಬರೆದಿರುವ ಪ್ರಮುಖ ಕೃತಿಗಳೆಂದರೆ ಯಾಕೆ ಕಾಡುತಿದೆ ಸುಮ್ಮನೆ, ತುಂಬೆ ಹೂ (ಜೀವನ ಚರಿತ್ರೆ), ಪೂರ್ವಿ ಕಲ್ಯಾಣಿ ಮತ್ತು ನನ್ನೊಳಗಿನ ಹಾಡು ಕ್ಯೂಬಾ (ನಾಟಕ) ಮುಂತಾದವು. ರಾಷ್ಟ್ರ ಪ್ರಶಸ್ತಿ ವಿಜೇತ ನಾತೀಚರಾಮಿ ಸಿನಿಮಾಕ್ಕೆ ಚಿತ್ರಕತೆಯನ್ನೂ ಬರೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT