ಕಲೆ 
ಪದ್ಯ ಪರಿಷೆ

ಕವನ ಸುಂದರಿ: ಸ್ಮಿತಾ ಅಮೃತರಾಜ್: ಒಂದು ಖಾಲಿ ಜಾಗ

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ, ಕವನ ಸುಂದರಿ 


ಒಂದು ಖಾಲಿ ಜಾಗ

ಎಲ್ಲರ ಬಳಿಯೂ ಎಲ್ಲರೊಳಗೂ
ಇರಬಹುದು ಒಂದೊಂದು ಖಾಲಿ ಜಾಗ. 


ಹಿತ್ತಲಿನಲ್ಲಿಯೋ? ಮುಂದಣ ಅಂಗಳದಲ್ಲಿಯೋ?
ಒಳಕೋಣೆಯೊಳಗೋ? ಅಥವಾ ಯಾವುದೋ
ಅದೃಶ್ಯ ಎಡೆಯಲ್ಲಿ ತೀರಾ ಖಾಸಗಿಯಾಗಿ.  


ಒಂದೊಮ್ಮೆ ಎಲ್ಲರೂ ಈ ಖಾಲಿ ಜಾಗದ
ಕುರಿತು ಯೋಚಿಸಿಯೇ ಇರುತ್ತಾರೆ.  


ಬೆಂಡೆ ಬಿತ್ತುವುದಾ? ತೊಂಡೆ ಹಬ್ಬಿಸುವುದಾ?
ಭತ್ತ ಬೆಳೆಯುವುದಾ?
ತುಸು ಹೆಚ್ಚೇ ಇದ್ದರೆ ಕಟ್ಟಡ ಕಟ್ಟಿಸಿ
ಬಿಕರಿಗಿಡುವುದಾ?
ಅವರವರ ಅನುಕೂಲಕ್ಕೆ ತಕ್ಕ ಹಾಗೆ
ಅಗತ್ಯಕ್ಕೆ ತಕ್ಕ ಹಾಗೆ.


ಇವರೇ ವಾರಸುದಾರರು ಅಂತ
ಬೆಟ್ಟು ಮಾಡಿ ತೋರಿಸಲಾಗದ ಅಸಹಾಯಕತೆಯಲ್ಲಿ
ಖಾಲಿ ಜಾಗವೊಂದು ಅವರಿವರ ಕೈಗೂಸಾಗುತ್ತಲೇ ಸಾಗುತ್ತದೆ
ವ್ಯಾಪಾರ- ವಹಿವಾಟು ಭರದಲ್ಲಿ ಕುದುರುತ್ತದೆ.


ಕಟ್ಟಡವಾದರೆ ಉಸಿರಾಡದೆಯೂ
ಹಲವು ಕಾಲ ಹಾಗೇ ಉಳಿದುಕೊಂಡು ಬಿಡುತ್ತದೆ.
ಬಿತ್ತಿದ್ದು ಬೆಳೆದದ್ದು ಕಾಲಕಾಲಕ್ಕೆ
ಹುಟ್ಟಿ,ಸತ್ತು,ಮರುಹುಟ್ಟು ಪಡೆದು
ಬದಲಾಗುತ್ತಲೇ ಇರುತ್ತದೆ.


ಹಾಗೇ..
ಎಷ್ಟು ಸುಲಭದಲ್ಲಿ ಈ ಖಾಲಿ ಜಾಗಗಳು
ತುಂಬಿಕೊಳ್ಳುತ್ತಲೇ ಬರಿದಾಗುತ್ತವೆ
ಕ್ರಯ-ವಿಕ್ರಯಗಳ ತಕ್ಕಡಿಯೊಳಗೆ
ತೂಗಿಸಿಕೊಂಡೇ ನಿಲ್ಲುತ್ತವೆ.


ಬಹುಕಾಲದಿಂದ ನೋಡುತ್ತಲೇ ಇರುವೆ
ಇಲ್ಲೊಂದು ಅಗೋಚರ ಖಾಲಿ ಸ್ಥಳ
ಹಾಗೇ ಉಳಿದುಕೊಂಡು ಬಿಟ್ಟಿದೆ.
ನಿರಾಕಾರ ಗಾಳಿ ಹೊತ್ತು ತರುವ ಅಪರೂಪದ
ಪರಿಮಳವಷ್ಟೇ ಅಲ್ಲಿ ಸುಳಿದಾಡುತ್ತದೆ.


ಒಂದು ನಿಶ್ಯಬ್ದ ಮಿಡುಕಾಟ
ಕಂಡದ್ದೂ ಕಾಣದ್ದೂ ಎಂದಿಗೂ ದೊರಕದ್ದು ಮಾತ್ರ
ಆ ಖಾಲಿಯೊಳಗೆ ತುಂಬಿಕೊಳ್ಳುತ್ತಲೇ ಇದೆ.
ಆದರೂ ಆ ಖಾಲಿ ಖಾಲಿಯಾಗಿಯೇ ಉಳಿದಿದೆ.


ಕುತೂಹಲವಿದ್ದರೆ, ಒಮ್ಮೆ ಮುಟ್ಟಿ
ಕಣ್ಬಿಟ್ಟು ನೋಡಿಕೊಳ್ಳಿ.
ಆ ಒಂದು ಖಾಲಿ ಜಾಗ ಬಹುಶ: 
ನಿಮ್ಮದೇ ಇರಬಹುದೇನೋ..?



ಕವಯಿತ್ರಿ ಸ್ಮಿತಾ ಅಮೃತರಾಜ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಪಂಜ ಗ್ರಾಮದವರು. ಮಡಿಕೇರಿ ಮತ್ತು ಸುಳ್ಯದಲ್ಲಿ ವಿದ್ಯಾರ್ಜನೆ ಮಾಡಿರುವ ಸ್ಮಿತಾ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ - ಮಂಗಳೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ. 'ಕಾಲ ಕಾಯುವುದಿಲ್ಲ 'ಅಂಗಳದಂಚಿನ ಕನವರಿಕೆಗಳು' ‘ಒಂದು ವಿಳಾಸದ ಹಿಂದೆ’ ಅವರ ಕೃತಿಗಳು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT