ನವದೆಹಲಿ: ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಸಕಲ ಸಿದ್ಧತೆಗಳೂ ನಡೆದಿದ್ದು, ಮೂವರು ಜನರನ್ನು 7 ದಿನಗಳ ಕಾಲ ಬಾಹ್ಯಾಕಾಶಕ್ಕೆ ಕಳಿಸಲಾಗುತ್ತದೆ.
ಸ್ಪೇಸ್ ಕ್ರಾಫ್ಟ್ ನ್ನು ಸುಮಾರು 300-400 ಕಿಮೀ ನಷ್ಟು ಕೆಳಮಟ್ಟದ ಭೂಕಕ್ಷೆಯಲ್ಲಿರಿಸಲಾಗುತ್ತದೆ. ಈ ಯೋಜನೆ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಬಾಹ್ಯಾಕಾಶ ಸಚಿವ ಜಿತೇಂದ್ರ ಸಿಂಗ್ "ಜಿಎಸ್ಎಲ್ ವಿ ಎಂಕೆ III ಉಡಾವಣಾ ವಾಹನವನ್ನು ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಬಳಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಾನವ ಸಹಿತ ಬಾಹ್ಯಾಕಾಶ ಯೋಜನೆ ಜಾರಿಗೂ ಮುನ್ನ ಇದೇ ಮಾದರಿಯ ಎರಡು ಮಾನವ ರಹಿತ ಗಗನ್ ಯಾನ್ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಯೋಜನೆ 2022 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಒಟ್ಟಾರೆ 10,000 ಕೋಟಿ ರೂಪಾಯಿ ಖರ್ಚಾಗಲಿದೆ ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಮಾನವ ಸಹಿತ ಬಾಹ್ಯಾಕಾಶ ಯೋಜನೆಯನ್ನು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.