ಬೆಂಗಳೂರು: ಕಳೆದ ಒಂದೂವರೆ ವರ್ಷಗಳಲ್ಲಿ 450ಕ್ಕೂ ಹೆಚ್ಚು ತರಬೇತಿದಾರರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.
ಭಾರತೀಯ ಕ್ರೀಡಾ ಪ್ರಾಧಿಕಾರದ ಆವರಣದಲ್ಲಿ ಕ್ರೀಡಾಂಗಣವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು. ಈ ಬಾರಿಯ ಬಜೆಟ್ ನಲ್ಲಿ ಕ್ರೀಡೆಗೆ ಹೆಚ್ಚಿನ ಹಣ ಮೀಸಲಿಟ್ಟು, ಖೇಲೋ ಇಂಡಿಯಾಕ್ಕಾಗಿ 3,200 ಕೋಟಿ ರೂಪಾಯಿ ಮಂಜೂರು ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಹೆಚ್ಚಿಸಲು ತಜ್ಞರನ್ನು ನೇಮಿಸಿಕೊಳ್ಳಲಾಗುತ್ತಿದ್ದು, ಎಲ್ಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.
ಇಲ್ಲಿನ ಕ್ರೀಡಾಪಟುಗಳಿಗಾಗಿ ಒಳಾಂಗಣ ಕ್ರೀಡಾಂಗಣವನ್ನು ಲೋಕಾರ್ಪಣೆಗೊಳಿಸಿದ್ದೇವೆ. ಸುಮಾರು 70 ಕೋಟಿ ರೂ. ವೆಚ್ಚದಲ್ಲಿ ಕ್ರಮವಾಗಿ 300 ಮತ್ತು 330 ಹಾಸಿಗೆಗಳ ಪುರುಷ ಮತ್ತು ಮಹಿಳೆಯ ಪ್ರತ್ಯೇಕ ಹಾಸ್ಟೆಲ್ ಗಳನ್ನು ನಿರ್ಮಿಸಲಾಗುವುದು, ಕ್ರೀಡಾ ಕೇಂದ್ರದಲ್ಲಿ 630 ಹಾಸಿಗೆಗಳಿಗೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು.
ಸುದ್ದಿಗಾರರ ಮತ್ತೊಂದು ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ಕಾಂಗ್ರೆಸ್ ಏನು ಬೇಕಾದರೂ ಹೇಳಲಿ. ಜನರಿಗೆ ವೈದ್ಯಕೀಯ, ಪಡಿತರ ಸೇರಿದಂತೆ ಹಲವು ಸೌಲಭ್ಯಗಳನ್ನುನೀಡಿದ್ದೇವೆ. ಕರ್ನಾಟಕಕ್ಕೆ ಭೇಟಿ ನೀಡಲು ಕಾಂಗ್ರೆಸ್ಗೆ ರಾಷ್ಟ್ರೀಯ ನಾಯಕರಿಲ್ಲದಿದ್ದರೆ ಅದು ನಮ್ಮ ತಪ್ಪಲ್ಲ. ಕಾಂಗ್ರೆಸ್ ಕರ್ನಾಟಕವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಟೀಕಿಸಿದರು.