ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಹಿಂಬಾಗಿಲ ರಾಜಕಾರಣ ಮಾಡುತ್ತಿವೆ. ಇದು ನಿಜಕ್ಕೂ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಬಿಜೆಪಿ ಮುಖಂಡ ಆರ್ ಅಶೋಕ್ ಹೇಳಿದ್ದಾರೆ.
ಬಿಬಿಎಂಪಿ ಮೇಯರ್ ಉಪಮೇಯರ್ ಆಯ್ಕೆ ಕುರಿತಂತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಕುರಿತು ಚರ್ಚೆ ನಡೆಸುತ್ತಿರುವಂತೆಯೇ ಇತ್ತ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಆರ್. ಅಶೋಕ್ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಮಾನ ಮಾಡುತ್ತಿದ್ದು, ಜನರ ತೀರ್ಪಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಹಿಂಬಾಗಿಲ ರಾಜಕಾರಣದ ಮೂಲಕ ಅಧಿಕಾರ ಹಿಡಿಯಲು ಹವಣಿಸುತ್ತಿವೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.
ಶುಕ್ರವಾರ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, "ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸೋತಿದ್ದರೂ, ಬಿಜೆಪಿ ಅಧಿಕಾರಕ್ಕೇರುವುದನ್ನು ತಡೆಯಲು ಅವು ಮೈತ್ರಿಗೆ ಮುಂದಾಗಿವೆ. ಈ ಹಿಂದೆಯೂ ಕೂಡ ಕಾಂಗ್ರೆಸ್ ಸೋಲುವ ಭೀತಿಯಿಂದ ಚುನಾವಣೆಯನ್ನು ಮುಂದೂಡಲು ಪ್ರಯತ್ನಿಸಿತ್ತು. ಈಗ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ತಂತ್ರ ನಡೆಸುತ್ತಿದೆ. ಎಂದು ಆರೋಪಿಸಿದರು.
ಅಮಿತ್ ಶಾ-ಆರ್ ಅಶೋಕ್ ಮಾತುಕತೆ
ಇದೇ ವೇಳೆ ಬಿಬಿಎಂಪಿ ಅಧಿಕಾರದ ಗದ್ದುಗೆ ಹಿಡಿಯುವ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಪ್ರಯತ್ನಗಳನ್ನು ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ತಿಳಿಸಲಾಗಿದೆ. ಸ್ವತಃ ಆರ್ ಅಶೋಕ್ ಅವರು ಅಮಿತ್ ಶಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಒಟ್ಟಾರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾತುಕತೆ ಇದೀಗ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನು ತೀವ್ರ ಕುತೂಹಲ ಕೆರಳಿಸಿರುವ ಬಿಬಿಎಂಪಿ ಅಧಿಕಾರದ ಗದ್ದುಗೆ ಯಾರಿಗೆ ದಕ್ಕುತ್ತದೆ ಎಂಬುದನ್ನು ಕಾದು ನೋಡಬೇಕಿದೆ.