ಬೆಂಗಳೂರು: ಸತತ ಎರಡನೇ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗದ್ದುಗೆ ಏರುವ ಕನಸು ಕಾಣುತ್ತಿದ್ದ ಬಿಜೆಪಿ ಪಕ್ಷದ ಕನಸಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಣ್ಣೀರೆರಚಲು ಸಿದ್ಧವಾಗಿವೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ, ಆಧಿಕಾರದ ಕನಸು ಕಾಣುತ್ತಿರುವ ಬಿಜೆಪಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಇದೀಗ ಬಿಬಿಎಂಪಿಯ ಆಡಳಿತ ಚುಕ್ಕಾಣಿ ಹಿಡಿಯಲು ಹವಣಸುತ್ತಿವೆ. ಇನ್ನು ಮೂಲಗಳ ಪ್ರಕಾರ ಈ ಬಗ್ಗೆ ಚರ್ಚಿಸಿಸಲು ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಜೆಡಿಎಸ್ ಪಕ್ಷದ ನಾಯಕರು ಖಾಸಗಿ ಹೊಟೆಲ್ ನಲ್ಲಿ ಸಭೆ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ.
ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ.
ಖಾಸಗಿ ಹೊಟೆಲ್ ನಲ್ಲಿ ಚರ್ಚೆ
ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಶತಾಯಗತಯ ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ದೊಮ್ಮಲೂರು ಬಳಿ ಇರುವ ಖಾಸಗಿ ಹೊಟೆಲ್ ನಲ್ಲಿ ಪಕ್ಷೇತರರೊಂದಿಗೆ ಸಭೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ನ ಚೆಲುವನಾರಾಯಣ ಸ್ವಾಮಿ, ಜಮೀರ್ ಅಹಮದ್ ಖಾನ್, ಟಿಎ ಶರವಣ ಹಾಗೂ ಕಾಂಗ್ರೆಸ್ ನ ಕೆಲ ಸಚಿವರು ಸೇರಿ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮೈತ್ರಿ ಬಗ್ಗೆ ಬಾಯಿ ಬಿಡದ ನಾಯಕರು
ಇನ್ನು ಬಿಬಿಎಂಪಿ ಅಧಿಕಾರದ ಗದ್ದುಗೆ ಹಿಡಿಯುವ ಕುರಿತು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಡುವೆ ನಡೆಯುತ್ತಿರುವ ಮೈತ್ರಿ ಕುರಿತು ಎರಡೂ ಪಕ್ಷಗಳ ನಾಯಕರು ಯಾವುದೇ ರೀತಿಯ ಸುಳಿವುಗಳನ್ನು ನೀಡುತ್ತಿಲ್ಲ. ಬದಲಿಗೆ ತಮಗೇನೂ ತಿಳಿದಿಲ್ಲವೆನ್ನುವಂತೆ ವರ್ತಿಸುತ್ತಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತ್ರಿ ಕುರಿತಂತೆ ತಮಗೆ ಯಾವುದೇ ರೀತಿಯ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಮೈತ್ರಿಗೆ ಗೌಡರ ಸಮ್ಮತಿ: ಶಾಸಕ ಜಮೀರ್ ಅಹ್ಮದ್ ಖಾನ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಕೋಮುವಾದಿಗಳಿಂದ ದೂರವಿಡಲು ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಚಾಮರಾಜಪೇಟೆ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರು ಮಹಾನಗರ ಪಾಲಿಕೆಯನ್ನು ಕೋಮುವಾದಿಗಳಿಂದ ದೂರವಿಡಲು ಜೆಡಿಎಸ್ ನಿರ್ಧರಿಸಿದೆ. ಈ ಬಗ್ಗೆ ಪಕ್ಷದ ವರಿಷ್ಠರಾದ ಎಚ್ ಡಿ ದೇವೇಗೌಡ ಅವರೊಂದಿಗೂ ಚರ್ಚಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಮೈತ್ರಿ ಕುರಿತಂತೆ ಆಹ್ವಾನ ಬಂದಿದೆ. ಹೀಗಾಗಿ ಇಂದು ಸಂಜೆ 6 ಗಂಟೆಗೆ ಸಭೆ ಕರೆಯಲಾಗಿದ್ದು, ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
198 ಸದಸ್ಯ ಬಲದ ಬಿಬಿಎಂಪಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನ, ಕಾಂಗ್ರೆಸ್ 76, ಜೆಡಿಎಸ್ 14 ಮತ್ತು ಪಕ್ಷೇತರರು 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಸಂಸದರು, ಶಾಸಕರು ಸೇರಿ ಮೇಯರ್ ಆಯ್ಕೆಗೆ 250 ಜನಪ್ರತಿನಿಧಿಗಳು ಮತ ಚಲಾಯಿಸಬೇಕಿದ್ದು, 126 ಮತ ಗಳಿಸಿದ ಅಭ್ಯರ್ಥಿ ಬಿಬಿಎಂಪಿ ಮೇಯರ್ ಆಗೆ ಆಯ್ಕೆಯಾಗಲಿದ್ದಾರೆ. ಪಕ್ಷದವರು ಮೇಯರ್ ಆಗಲಿದ್ದಾರೆ.