ಪ್ರಧಾನ ಸುದ್ದಿ

ನನಗೂ ಸಿಎಂ ಆಗುವ ಅರ್ಹತೆ ಇದೆ: ಪರಮೇಶ್ವರ

Lingaraj Badiger

ಬೆಂಗಳೂರು: 'ನನಗೂ ಈ ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಚುನಾವಣೆಗೂ ಮುನ್ನ ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ' ಎಂದು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಪರಮೇಶ್ವರ, ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎನ್ನುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು. ಅಲ್ಲದೆ ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ನನಗೆ ಆ ಅರ್ಹತೆ ಇದೆ ಎಂಬ ಕಾರಣಕ್ಕೆ ದಲಿತ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಅಭಿಪ್ರಾಯ ವ್ಯಕ್ತಪಡಿಸುವುದೇ ತಪ್ಪೇ? ಎಂದಿದ್ದಾರೆ.

ದಲಿತ ಸಿಎಂ ಸ್ಥಾನದ ಬೇಡಿಕೆ ಇಟ್ಟಿರುವುದು ಪಕ್ಷದವರಲ್ಲ. ಹೀಗಾಗಿ ನಾನು ಆ ಬಗ್ಗೆ ಪ್ರತಿಕ್ರಿಯಿಸಲ್ಲ. ಪಕ್ಷದ ಒಳಗಿನವರು ಹೇಳಿದ್ದರೆ ಪ್ರತಿಕ್ರಿಯಿಸುತ್ತಿದ್ದೆ ಎಂದಿರುವ ಪರಮೇಶ್ವರ, ನಾನು ಸಹ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ಸಮಯ ಬಂದಾಗ ದಲಿತರು ಸಹ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ.

ಕಳೆದ ಮಂಗಳವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ಸೇರಿದ್ದ 20ಕ್ಕೂ ಹೆಚ್ಚು ಪ್ರಮುಖ ದಲಿತ ಸಂಘಟನೆಯ ಮುಖಂಡರು ಪರಮೇಶ್ವರ ಅವರಿಗೆ ಸಿಎಂ ಪಟ್ಟ ನೀಡಬೇಕು ಎಂದು ಒತ್ತಾಯಿಸಿದ್ದರು. ಅಲ್ಲದೆ ದಲಿತರಿಗೆ ಈ ಬಾರಿಯೂ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿಸಿದರೆ ರಾಜ್ಯಾದ್ಯಂತ ಪ್ರಬಲ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

SCROLL FOR NEXT