ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿ ವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆ ಮೂಲಕ ತೆರಳಿದ ಪ್ರತಿಪಕ್ಷಗಳು ರಾಜ್ಯಪಾಲ ವಜುಭಾಯ್ ವಾಲಾಗೆ ಮನವಿ ಪತ್ರ ಸಲ್ಲಿಸಿದೆ.
ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಿಂದ ಗುರುವಾರ ಮಧ್ಯಾಹ್ನ 12ಗಂಟೆಗೆ ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್ ಅಶೋಕ್ ಹಾಗೂ ಜೆಡಿಎಲ್ ಪಿ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜಭವನದವರೆಗೆ ಪಾದಯಾತ್ರೆ ನಡೆಸಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.
ರಾಜ್ಯಪಾಲರ ಭೇಟಿಯ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿದ ವಿಪಕ್ಷ ನಾಯಕರು, ರಾಜ್ಯಪಾಲರನ್ನು ಭೇಟಿ ಮಾಡಿ, ಪ್ರಕರಣ ಕುರಿತು ಪೂರ್ಣ ಮಾಹಿತಿ ನೀಡಲಾಗಿದೆ. ಅಲ್ಲದೇ ರಾಜ್ಯ ಸರ್ಕಾರದ ಧೋರಣೆ ಬಗ್ಗೆಯೂ ತಿಳಿಸಿದ್ದೇವೆ. ಪ್ರಕರಣ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಮನವಿ ಮಾಡಿದ್ದೇವೆ.
ನಮ್ಮ ಬೇಡಿಕೆ ರಾಜ್ಯಪಾಲರು ಸಕಾರಾತ್ಮಕವಾಗಿ ಸ್ಪಂಧಿಸಿದ್ದು, ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಜೆಡಿಎಲ್ ಪಿ ನಾಯಕ ಹೆಚ್.ಡಿ ಕುಮಾರಸ್ವಾಮಿ, ಮುಖ್ಯಮಂತ್ರಿಗಳು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಸತ್ಯವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ. ಡಿ.ಕೆ ರವಿ ತೇಜೋವಧೆಗೆ ಸಿಎಂ ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಹೀಗಾಗಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ರವಿ ಸಾವಿನ ಕುರಿತು ರಾಜ್ಯ ಸರ್ಕಾರಕ್ಕೆ ಮೊದಲೇ ಮಾಹಿತಿ ಇತ್ತೆಂಬ ಅನುಮಾನ ಮೂಡಿದೆ. ಅನುಮಾನ ಪರಿಹಾರವಾಗಬೇಕಾದ್ರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಿ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.