ಲಕನೌ: ಮುಂದಿನ ವರ್ಷ ನಿಗದಿಯಾಗಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಬಿಜೆಪಿ ಸ್ಪರ್ಧಿಸಲಿದೆ ಎಂದು ರಾಜ್ಯದ ಬಿಜೆಪಿ ಅಧ್ಯಕ್ಷ ಕೇಶವ ಮೌರ್ಯ ಹೇಳಿದ್ದಾರೆ. ಚುನಾವಣೆಯ ನಂತರ ಶಾಸಕರು ಮುಖ್ಯಮಂತ್ರಿಯನ್ನು ಆಯ್ಕೆಮಾಡಲಿದ್ದಾರೆ ಎಂದು ಕೂಡ ಅವರು ಹೇಳಿದ್ದಾರೆ.
ಹೊಸದಾಗಿ ರಾಜ್ಯದ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಮೌರ್ಯ, ಮಿರ್ಜಾಪುರದಲ್ಲಿ ಚುನಾವಣಾ ಪ್ರಚಾರ ವೇಳೆಯಲ್ಲಿ ಮಾತನಾಡಿದ್ದು ಗೆದ್ದ ನಂತರ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲಿದ್ದೇವೆ ಎಂದಿದ್ದಾರೆ.
"ಪಕ್ಷದ ಶಾಸಕರು ಚುನಾವಣೆಯ ನಂತರ ನಿರ್ಧರಿಸಲಿದ್ದಾರೆ" ಎಂದು ವಿಂಧ್ಯಾವಾಸಿನಿ ತಾಯಿಗೆ ಪೂಜೆ ಸಲ್ಲಿಸಿದ ನಂತರ ವರದಿಗಾರರಿಗೆ ತಿಳಿಸಿದ್ದಾರೆ.
ಏಪ್ರಿಲ್ ೨೪ ರಂದು ಲಕನೌನಲ್ಲಿ ಪಕ್ಷದ ಸಭೆ ನಡೆಯಲಿದ್ದು, ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಚರ್ಚಿಸಲಿದ್ದೇವೆ ಎಂದಿದ್ದಾರೆ.
ಈ ಚುನಾವಣೆಯಲ್ಲಿ ಅಭಿವೃದ್ಧಿ ಬಿಜೆಪಿಯ ಮೂಲಮಂತ್ರವಾಗಲಿದ್ದು, ೪೦೪ ಕ್ಷೇತ್ರಗಳಲ್ಲಿ ೨೬೫ ಕಡೆ ಬಿಜೆಪಿ ಗೆಲ್ಲಲಿದೆ ಎಂದು ಮೌರ್ಯ ಹೇಳಿದ್ದಾರೆ.