ಬೆಂಗಳೂರು: ತಾಂಜೇನಿಯಾ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚಾಂದ್ ಪಾಶಾ ಮತ್ತು ಮೌನೇಸ್ ಬಂಧಿತ ಆರೋಪಿಗಳು. ಅಂದು ಯುವತಿ ಮೇಲೆ ಹಲ್ಲೆ ಮಾಡಿದವರಲ್ಲಿ ಇವರಿಬ್ಬರು ಸೇರಿದ್ದರು ಎಂದು ತಿಳಿದು ಬಂದ ಹಿನ್ನಲೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಈವರೆಗೆ ಒಟ್ಟು 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಿನ್ನೆಯಷ್ಟೇ, ಪ್ರಕರಣದ ತನಿಖೆಯನ್ನು ಪರಿಣಾಮಕಾರಿಯಾಗಿ ನಡೆಸುತ್ತಿಲ್ಲ ಎಂಬ ಆರೋಪದ ಮೇಲೆ ಯಶವಂತಪುರ ಹೆಚ್ಚುವರಿ ಪೊಲೀಸ್ ಆಯುಕ್ತ(ಎಸಿಪಿ) ಅಶ್ವತನಾರಾಯಣ ಪಿ . ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಆದೇಶ ಹೊರಡಿಸಿದ್ದರು.
ಮೊನ್ನೆ, ಪ್ರಕರಣ ಸಂಬಂಧ ಓರ್ವ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು. ಪೊಲೀಸ್ ಇನ್ಸ್ ಪೆಕ್ಟರ್ ಪ್ರವೀಣ್ ಬಾಬು ಹಾಗೂ ಪೇದೆಗಳಾದ ಮಂಜುನಾಥ್ ಮತ್ತು ರಾಜಶೇಖರ್ ಅವರನ್ನು ಅಮಾನತುಗೊಳಿಸಲಾಗಿದೆ.
ತಾಂಜೇನಿಯ ವಿದ್ಯಾರ್ಥಿ ಎಣೆದ ಕಟ್ಟು ಕಥೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿರುವುದು ಇದೀಗ ಪೊಲೀಸ್ ಇಲಾಖೆಯಲ್ಲಿ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲೂ ತೀವ್ರ ವಿರೋಧ ವ್ಯಕ್ತವಾಗಿದೆ.
ತನಿಖೆ ತೀವ್ರ: ತಾಂಜೇನಿಯಾ ವಿದ್ಯಾರ್ಥಿಯು ಮೇಲೆ ನಡೆದಿರುವ ಹಲ್ಲೆ ಪ್ರಕರಣ ತನಿಖೆ ನಡೆಸುತ್ತಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಚರಣ್ರೆಡ್ಡಿ ಅವರು ಅಧಿಕಾರಿಗಳೊಂದಿಗೆ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಪರಾಮರ್ಶೆ ನಡೆಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳು ಸಂತ್ರಸ್ಥ ಯುವತಿ ಆಕೆಯ ಸ್ನೇಹಿತರು ಅಪಘಾತ ನಡೆಸಿದ ತಾಂಜೇನಿಯಾ ಯುವಕನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಲಾಗಿದ್ದು ಅದಷ್ಟು ಬೇಗ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಚರಣ್ ರೆಡ್ಡಿ ತಿಳಿಸಿದ್ದಾರೆ.
ಕಳೆದ ಭಾನುವಾರ ಮದ್ಯ ಸೇವಿಸಿದ್ದ ಸೂಡಾನ್ ವಿದ್ಯಾರ್ಥಿ ಮೊಹಮದ್ ಅಹದ್ (21) ಎಂಬಾತ ಮನಬಂದಂತೆ ಕಾರು ಚಾಲನೆ ಮಾಡಿಕೊಂಡು ಬಂದು ಹೆಸರುಘಟ್ಟ ಮುಖ್ಯರಸ್ತೆಯ ಗಣಪತಿ ನಗರದಲ್ಲಿ ಸನಾವುಲ್ಲಾ ಅವರ ಬೈಕ್ಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಅವರ ಪತ್ನಿ ಶಬಾನಾ ತಾಜ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇದರಿಂದ ಆಕ್ರೋಶಗೊಂಡ ಸ್ಥಳದಲ್ಲಿದ್ದ ಜನ ಕಾರಿನಲ್ಲಿದ್ದ ತಾಂಜೇನಿಯಾದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ಕಾರಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಸಂಬಂಧ ಇದುವರೆಗೆ 9 ಮಂದಿಯನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos