ಬೆಂಗಳೂರು: ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೇಷ್ಠ ಪುತ್ರ ರಾಕೇಶ್(39) ಅವರು ಬಹು ಅಂಗಾಂಗ ವೈಫಲ್ಯದಿಂದ ಶನಿವಾರ ನಿಧನರಾಗಿದ್ದಾರೆ.
ಕಳೆದ ಒಂದು ವಾರದಿಂದ ಬೆಲ್ಜಿಯಂನ ಬ್ರಷಲ್ಸ್ ನ ಆಂಟ್ ವರ್ಪ್ ಯೂನಿರ್ವಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಕೇಶ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಎಂದೇ ಬಿಂಬಿತರಾಗಿದ್ದ 39 ವರ್ಷದ ರಾಕೇಶ್ ಅವರು ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.
ಎರಡು ದಿನಗಳ ಹಿಂದಷ್ಟೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಪುತ್ರನ ಆರೋಗ್ಯ ವಿಚಾರಿಸಲು ಬೆಲ್ಜಿಯಂಗೆ ತೆರಳಿದ್ದರು.
ವಿಶೇಷ ವಿಮಾನದ ಮೂಲಕ ನಾಳೆ ಸಂಜೆ ರಾಕೇಶ್ ಅವರ ಪಾರ್ಥಿವ ಶರೀರವನ್ನು ನೇರವಾಗಿ ಮೈಸೂರಿಗೆ ಕೊಂಡಯ್ಯಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಮೂಲಗಳು ತಿಳಿಸಿವೆ.
ಇನ್ನು ಸಿಎಂ ಪುತ್ರನ ಅಕಾಲಿಕ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದು, ರಾಕೇಶ್ ಸಾವು ತೀವ್ರ ಆಘಾತದ ವಿಚಾರ ಎಂದು ಹೇಳಿದ್ದಾರೆ.
ಸೋಮವಾರ ಮೈಸೂರಿನಲ್ಲಿ ಅಂತ್ಯಕ್ರಿಯೆ
ರಾಕೇಶ್ ಅವರ ಅಂತ್ಯಕ್ರಿಯೆ ಸೋಮವಾರ ಮೈಸೂರು ಸಮೀಪದ ಟಿ.ಕಾಟೂರು ಫಾರಂನಲ್ಲಿ ನಡೆಯಲಿದೆ ಎಂದು ಸಚಿವ ಮಹದೇವ ಪ್ರಸಾದ್ ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಗೃಹ ಸಚಿವ ಡಾ.ಜಿ.ಪರಮೇಶ್ವರ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಸಿಎಂ ಪುತ್ರನ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಅಗತ್ಯ ನೆರವನ್ನು ಒದಗಿಸುವಂತೆ ಭಾರತದ ರಾಯಭಾರಿ ಮಂಜಿತ್ ಪುರಿ ಅವರಿಗೆ ಪ್ರಧಾನಿ ಅವರು ಸೂಚನೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.