ಬೆಂಗಳೂರು: ದುಷ್ಕರ್ಮಿಗಳಿಂದ ಭಾನುವಾರ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ರಾಜು ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮೈಸೂರು ಜಿಲ್ಲಾಡಳಿತಕ್ಕೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದಾರಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಇಂದು ಶಕ್ತಿಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೈಸೂರಿನಲ್ಲಿ ಪರಿಸ್ಥಿತಿ ಕೈಮೀರದಂತೆ ತಡೆಯಲು ಹಾಗೂ ಕಾನುನೂ ಸುವ್ಯವಸ್ಥೆಗೆ ಸಂಬಂಧಿಸಲಿದಂತೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರಿಗೆ ಸೂಚಿಸಲಾಗಿದೆ ಎಂದರು. ಅಲ್ಲದೆ ರಾಜು ಕೊಲೆ ಮಾಡಿದವರ ಬಂಧನಕ್ಕೆ ಶೀಘ್ರ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ ಎಂದರು.
ಇದೇ ವೇಳೆ ಶಾಂತಿ ಕಾಪಾಡುವಂತೆ ಜನತೆಗೆ ಸಿದ್ದರಾಮಯ್ಯ ಮನವಿ ಮಾಡಿದರು.
ಇನ್ನು ರಾಜ್ಯದಲ್ಲಿ ಪದೇಪದೆ ಇಂತಹ ಘಟನೆಗಳು ಸಂಭವಿಸುತ್ತಲೇ ಇರುತ್ತವೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪವನ್ನು ತಳ್ಳಿಹಾಕಿದ ಸಿಎಂ, ಬಿಜೆಪಿ ಇರುವುದೇ ರಾಜಕೀಯ ಮಾಡಲುವುದಕ್ಕಾಗಿ ಎಂದು ತಿರುಗೇಟು ನೀಡಿದರು.
ರಾಜು ಕೊಲೆ ಖಂಡಿಸಿ ಬಿಜೆಪಿ ಇಂದು ಮೈಸೂರು ಬಂದ್ ಗೆ ಕರೆ ನೀಡಿದ್ದು, ಪ್ರತಿಭಟನೆ ಹಿಂಸಾಚರಾಕ್ಕೆ ತಿರುಗಿದ ಪರಿಣಾಮ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜು ಕೊಲೆಯನ್ನು ಖಂಡಿಸಿರುವ ಬಿಜೆಪಿ ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದೆ.
ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಸಿ ಶಿಖಾ ಅವರು ಮೃತ ರಾಜು ಕುಟುಂಬಕ್ಕೆ 5 ಲಕ್ಷ ರುಪಾಯಿ ಪರಿಹಾರ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಇನ್ನು ಬಿಜೆಪಿ ಮೈಸೂರು ಘಟಕ ಸಹ, ರಾಜು ಕುಟುಂಬಕ್ಕೆ 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ. ಅಲ್ಲದೆ ಹೋಟೆಲ್ ಮಾಲೀಕರ ಸಂಘದ ರಾಜೇಂದ್ರ ಅವರು ಸಹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ನಿನ್ನೆ ಸಂಜೆ ಬಿಜೆಪಿ ಕಾರ್ಯಕರ್ತ ರಾಜು ಅವರನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಹತ್ಯೆಯನ್ನು ಬಿಜೆಪಿ ಖಂಡಿಸಿತ್ತು. ಅಲ್ಲದೆ ಬಂದ್ ಗೆ ಕರೆ ನೀಡಿತ್ತು. ಇದೀಗ ಮೈಸೂರಿನಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಗಳ ಮೇಲೆ ಕಲ್ಲೂ ತೂರಾಟ ನಡೆದಿದೆ. ಇದರ ಪರಿಣಾಮ 3 ಬಸ್ ಗಳು ಜಖಂ ಗೊಂಡಿವೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos