ಬೆಂಗಳೂರು: ಪರೀಕ್ಷೆ ಆರಂಭವಾಗುವ ಮುನ್ನವೇ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಯಾಗಿಗ್ದು, ರಾಜ್ಯಾದ್ಯಂತ ನಡೆದ ರಸಾಯನಶಾಸ್ತ್ರ ಪರೀಕ್ಷೆಯನ್ನು ಪದವಿ ಪೂರ್ವ ಶಿಕ್ಷೆ ಇಲಾಖೆ ಸೋಮವಾರ ರದ್ದುಗೊಳಿಸಿದೆ.
ಇಂದು ಬೆಳಗ್ಗೆ ಪರೀಕ್ಷೆ ಆರಂಭವಾಗುವ ಮುನ್ನವೇ ಕೆಲವು ಕಡೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ರಸಾಯನಶಾಸ್ತ್ರ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಶೀಘ್ರವೇ ಮರು ಪರೀಕ್ಷೆ ನಡೆಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಪಲ್ಲವಿ ಆಕೃತಿ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಪಿಯು ಮಂಡಳಿ ತನಿಖೆಗೆ ಆದೇಶಿಸಿದ್ದು, ಈ ಸಂಬಂಧ ಈಗಾಗಲೇ ಎರಡು ಕೇಂದ್ರಗಳ ಮುಖ್ಯ ಅಧೀಕ್ಷಕರನ್ನು ಹಾಗೂ ಸಹ ಮುಖ್ಯ ಅಧೀಕ್ಷರನ್ನು ಅಮಾನತುಗೊಳಿಸಲಾಗಿದೆ ಎಂದು ಪಲ್ಲವಿ ಆಕೃತಿ ಅವರು ತಿಳಿಸಿದ್ದಾರೆ. ಅಲ್ಲದೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಎರಡೂ ಕೇಂದ್ರಗಳ ಬದಲಾವಣೆಗೂ ಪಿಯು ಮಂಡಳಿ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ಹಾಗೂ ಬಳ್ಳಾರಿಯ ಗಾಂಧಿನಗರದಲ್ಲಿರುವ ಮಹಿಳಾ ಪದವಿ ಪೂರ್ವ ಕಾಲೇಜ್ ನಲ್ಲಿ ಇಂದು ಬೆಳಗ್ಗೆ ಪರೀಕ್ಷೆ ಆರಂಭವಾಗುವ ಮುನ್ನವೇ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಲಾಗಿದೆ ಎಂದು ಪಲ್ಲವಿ ಆಕೃತಿ ಅವರು ತಿಳಿಸಿದ್ದಾರೆ.