ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ನಾಳೆ ರೈಲ್ವೆ ಬಂದ್ ಗೆ ಕರೆ ನೀಡಿವೆ. ಆದರೆ ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ. ನಿಗದಿತ ವೇಳಾಪಟ್ಟಿಯಂತೆ ರೈಲುಗಳು ಸಂಚಾರ ನಡೆಸಲಿವೆ ಎಂದು ಬುಧವಾರ ರೈಲ್ವೆ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಪುನರುಚ್ಚರಿಸಿರುವ ಕನ್ನಡ ಒಕ್ಕೂಟ ಸಂಘದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ನಾಳೆ ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆವರೆಗೆ ರೈಲು ಬಂದ್ ನಡೆಸಲಾಗುವುದು ಎಂದು ಹೇಳಿದ್ದಾರೆ.
ನಾಳೆ ನಡೆಯಲಿರುವ ರೈಲ್ವೆ ಬಂದ್ ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳ ಸುಮಾರು 1 ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇರುವುದಾಗಿ ವಾಟಾಳ್ ತಿಳಿಸಿದ್ದಾರೆ.
ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ವೇಳೆ ನಡೆದ ಗಲಭೆಗೆ ದುಷ್ಟಶಕ್ತಿಗಳೇ ಕಾರಣ ಎಂದಿರುವ ವಾಟಾಳ್, ಪ್ರತಿಭಟನೆ ವೇಳೆ ನಡೆದ ಗಲಭೆಗೂ ಕನ್ನಡ ಪರ ಒಕ್ಕೂಟಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ಸೆ.15ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯದಾದ್ಯಂತ ರೈಲು ತಡೆದು ಪ್ರತಿಭಟನೆ ನಡೆಸಲಾಗುವುದು. ಆದರೆ ಬೇರೆ ಯಾವುದೇ ರೀತಿಯ ಬಂದ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೆಟ್ರೋ, ಬಸ್, ವಾಹನ ಸಂಚಾರ ಎಂದಿನಂತೆ ಇರಲಿದೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ರೈಲ್ವೆ ಪೊಲೀಸರು, ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ, ರೈಲುಗಳ ಸಂಚಾರ ವೇಳಾಪಟ್ಟಿಯಂತೆ ಸಂಚರಿಸಲು ಸೂಕ್ತ ಭದ್ರತೆ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಯಾವುದೇ ಪ್ರಯಾಣಿಕರು ತೊಂದರೆಗೆ ಸಿಲುಕಿದರೆ 18004251363 ನಂಬರ್ಗೆ ಕರೆ ಮಾಡುವಂತೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos