ನವದೆಹಲಿ: ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ 18 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಸೆ.20ರ ಆದೇಶವನ್ನು ಮಾರ್ಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಸೆ.20ರ ಆದೇಶವನ್ನು ಯಾವ ರೀತಿ ಪಾಲಿಸುತ್ತೀರಿ? ಎಂದು ರಾಜ್ಯದ ಪರ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಅವರನ್ನು ಪ್ರಶ್ನಿಸಿತು.
ನವೆಂಬರ್ 2016ರವರೆಗೂ ತಮಿಳುನಾಡಿಗೆ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸಿದ ನಾರಿಮನ್ ಅವರು, ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ. ಹೀಗಾಗಿ ವಿಧಾನಮಂಡಲ ಅಧಿವೇಶನ ಕಾವೇರಿ ನೀರು ಕುಡಿಯಲು ಮಾತ್ರ ಬಳಸಲಾಗುವುದು ಎಂಬ ನಿರ್ಣಯ ತೆಗೆದುಕೊಂಡಿದೆ. ಸದನದ ನಿರ್ಣಯ ಸುಪ್ರೀಂಕೋರ್ಟ್ ವಿರುದ್ಧವಲ್ಲ ಎಂದು ಸ್ಪಷ್ಟಪಡಿಸಿದರು.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ತಮಿಳುನಾಡು ಪರ ವಕೀಲರು, ನೀರು ಬಿಡಬೇಕೆಂಬ ಕೋರ್ಟ್ ಆದೇಶ ಯಾಕೆ ಪಾಲಿಸಲಿಲ್ಲ? ಎಂದು ಕರ್ನಾಟಕವನ್ನು ಪ್ರಶ್ನಿಸಿದರು. ಅಲ್ಲದೆ ನೀರು ಬಿಡುವವರೆಗೂ ಕರ್ನಾಟಕದ ವಾದವನ್ನು ಆಲಿಸಬಾರದು ಮತ್ತು ಬೆಂಗಳೂರಿಗೆ ಕಾವೇರಿ ನೀರು ಕೇಳುವುದು ಸರಿಯಲ್ಲ ಎಂದು ವಾದಿಸಿದರು.
ವಾದ ಪ್ರತಿವಾದ ಆಲಿಸಿದ ಕೋರ್ಟ್, ತಮಿಳುನಾಡಿಗೆ ನಾಳೆಯಿಂದ ಮೂರು ದಿನಗಳ ಕಾಲ ನಿತ್ಯ 6 ಸಾವಿರ ಕ್ಯೂಸೆಕ್ ನಂತ ಒಟ್ಟು 18 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಆದೇಶಿಸಿ, ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿದೆ. ಅಲ್ಲದೆ ಸದನದ ನಿರ್ಣಯ ಏನೇ ಇದ್ದರೂ ಮೊದಲು ಕೋರ್ಟ್ ಆದೇಶವನ್ನು ಪಾಲಿಸಿ, ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟವಾಗಿ ಸೂಚಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos