ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ಗುರುವಾರ ಕೇಂದ್ರ ಸರ್ಕಾರ ಕರ್ನಾಟಕ ಹಾಗೂ ತಮಿಳುನಾಡು ಮುಖ್ಯಸ್ಥರ ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುತ್ತಿದ್ದಾರೆ.
ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು, ಮುಖ್ಯಕಾರ್ಯದರ್ಶಿಗಳ ಸಭೆ ಕರೆಯಲಾಗಿದ್ದು, ಕಾವೇರಿ ನೀರು ಹಂಚಿಕೆ ಕುರಿತ ಸಮಸ್ಯೆ ನಿವಾರಣೆ ಕುರಿತಂತೆ ಚರ್ಚಿಸಲಾಗುತ್ತದೆ.
ದೆಹಲಿಯಲ್ಲಿ ನಾಳೆ ಬೆಳಿಗ್ಗೆ 11.30ಕ್ಕೆ ಶ್ರಮಶಕ್ತಿ ಭವನದಲ್ಲಿ ನಡೆಯಲಿರುವ ಸಭೆಗೆ ಆಗಮಿಸುವಂತೆ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ. ಆದರೆ ಕಾವೇರಿ ಕಣಿವೆಯ ಇತರ ರಾಜ್ಯಗಳಾದ ಕೇರಳ ಮತ್ತು ಪುದುಚೇರಿಯ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸದಿರಲು ನಿರ್ಧರಿಸಲಾಗಿದೆ.
ಕರ್ನಾಟಕದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಸೇರಿದಂತೆ ನೀರಾವರಿ ಇಲಾಖೆಯ ಮುಖ್ಯಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ. ಅಂತೆಯೇ ತಮಿಳುನಾಡು ಪರವಾಗಿ ಲೋಕೋಪಯೋಗಿ ಸಚಿವ ಎಸ್ ಪಳನಿಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ಸಿಎಂ ಜಯಲಲಿತಾ ಅವರ ಅನಾರೋಗ್ಯದಿಂದಾಗಿ ಅವರು ನಾಳಿನ ಸಭೆಗೆ ಗೈರಾಗಲಿದ್ದು, ಅವರ ಬದಲಿಗೆ ಪಳನಿ ಸ್ವಾಮಿ ನೇತೃತ್ವದಲ್ಲಿ ಮೂವರ ತಂಡ ನಾಳಿನ ಸಭೆಯಲ್ಲಿ ತಮಿಳುನಾಡು ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿದುಬಂದಿದೆ.