ನವದೆಹಲಿ: ಇತ್ತೀಚಿಗೆ ರಾಜಕೀಯ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ನೀಡುವ ಭರವಸೆಗಳನ್ನು ಈಡೇರಿಸದೆ ಇರುವುದರಿಂದ ಚುನಾವಣಾ ಪ್ರಣಾಳಿಕೆ ಕೇವಲ ಕಾಗದದ ರದ್ದಿಯಾಗುತ್ತಿದ್ದು, ಇದಕ್ಕೆ ರಾಜಕೀಯ ಪಕ್ಷಗಳನ್ನೇ ಹೊಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಅವರು ಶನಿವಾರ ಹೇಳಿದ್ದಾರೆ.
ಇಂದು ಚುನಾವಣಾ ವಿಷಯಗಳಿಗೆ ಸಂಬಂಧಿಸಿದ ಆರ್ಥಿಕ ಸುಧಾರಣೆ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಖೇಹರ್ ಅವರು, ಭರವಸೆಗಳನ್ನು ಈಡೇರಿಸಲಾಗದಿರುವುದನ್ನು ಸಮರ್ಥಿಸಿಕೊಳ್ಳುವಲ್ಲಿಯೂ ಪಕ್ಷಗಳ ಸದಸ್ಯರಲ್ಲಿ ಒಮ್ಮತ ಇರುವುದಿಲ್ಲ. ಅದೇ ರೀತಿ, ನಿರ್ಲಜ್ಜ ಕಾರಣಗಳನ್ನೂ ರಾಜಕೀಯ ಪಕ್ಷಗಳು ನೀಡುತ್ತಿವೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ 2014ರ ಸಾರ್ವತ್ರಿಕ ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಬಿಡುಗಡೆ ಮಾಡಿದ್ದ ಚುನಾವಣಾ ಪ್ರಣಾಳಿಕೆಗಳ ಬಗ್ಗೆ ಉಲ್ಲೇಖಿಸಿದ ಅವರು, ಬಡತನದ ಅಂಚಿನಲ್ಲಿರುವವರಿಗೆ ಸಾಮಾಜಿಕ, ಆರ್ಥಿಕ ನ್ಯಾಯ ಒದಗಿಸುವ ಸಾಂವಿಧಾನಿಕ ಗುರಿ ಮತ್ತು ಚುನಾವಣಾ ಸುಧಾರಣೆಗೆ ಸಂಬಂಧಿಸಿದ ಯಾವುದೇ ವಿಷಯಗಳು ಈ ಪ್ರಣಾಳಿಕೆಗಳಲ್ಲಿ ಇಲ್ಲ ಎಂದರು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಸಹ ಹಾಜರಿದ್ದರು.