ಚೆನ್ನೈ: ತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ಜಟಾಪಟಿ ತೀವ್ರಗೊಂಡಿದ್ದು, ಪಕ್ಷದ ಹಿರಿಯ ನಾಯಕ ಇ ಮಧುಸೂದನನ್ ಅವರು ಗುರುವಾರ ನಿಯೋಜಿತ ಮುಖ್ಯಮಂತ್ರಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರ ವಿರುದ್ಧ ತಿರುಗಿಬಿದ್ದಿರುವ ಹಂಗಾಮಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ಘೋಷಿಸಿದ್ದಾರೆ.
ಮಧುಸೂದನನ್ ಅವರು ಇಂದು ಬೆಳಗ್ಗೆ ಚೆನ್ನೈನ ಗ್ರೀನ್ ವೇಸ್ ನಲ್ಲಿರುವ ಓ ಪನ್ನೀರ್ ಸೆಲ್ವಂ ಅವರ ನಿವಾಸಕ್ಕೆ ಭೇಟಿ ನೀಡಿ, ಬೆಂಬಲ ನೀಡಿದ್ದಾರೆ. ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧುಸೂದನನ್ ಅವರು, ಪಕ್ಷವನ್ನು ಗೂಂಡಾಗಳಿಂದ ರಕ್ಷಿಸಬೇಕಿದೆ. ಶಶಿಕಲಾ ಅವರು ತಾವು ರಾಜಕೀಯಕ್ಕೆ ಬರುವುದಿಲ್ಲ ಎಂದು ಜಯಲಲಿತಾ ಅವರಿಗೆ ಮಾತು ಕೊಟ್ಟಿದ್ದಾರೆ. ಆದರೆ ಅವರ ನಿಧನದ ನಂತರ ಅಧಿಕಾರಕ್ಕಾಗಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ವಿರುದ್ಧ ವಾಗ್ದಾಳಿ ನಡೆಸಿದರು.
ಜಯಲಲಿತಾ ಅವರಿಗೆ ದ್ರೋಹ ಮಾಡಿರುವ ಶಶಿಕಲಾ ಅವರು ಈ ರಾಜ್ಯದ ಮುಖ್ಯಮಂತ್ರಿಯಾದರೆ ಅದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಧುಸೂದನನ್ ಹೇಳಿದ್ದಾರೆ.
ಈ ಮಧ್ಯೆ ತಮಿಳುನಾಡು ರಾಜ್ಯಪಾಲ ಸಿ.ಎಚ್.ವಿದ್ಯಾಸಾಗರ್ ರಾವ್ ಅವರು ಇಂದು ಮಧ್ಯಾಹ್ನ ಮುಂಬೈನಿಂದ ಚೆನ್ನೈಗೆ ಆಗಮಿಸುತ್ತಿದ್ದು, ಪನ್ನೀರ್ ಸೆಲ್ವಂ ಅವರು ಚೆನ್ನೈ ವಿಮಾನ ನಿಲ್ದಾಣದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕಿ ಶಶಿಕಲಾ ಅವರು ಇಂದು ಸಂಜೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚಿಸುವ ಹಕ್ಕು ಮಂಡಿಸಲಿದ್ದಾರೆ ಎನ್ನಲಾಗಿದೆ. ಆದರೆ ಯಾರಿಗೆ ಎಷ್ಟು ಶಾಸಕರ ಬೆಂಬಲವಿದೆ ಎಂಬುದರ ಮೇಲೆ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯ ಭವಿಷ್ಯ ನಿರ್ಧಾರವಾಗುತ್ತೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos