ಚೆನ್ನೈ: ತಮಿಳುನಾಡು ಆಡಳಿತರೂಢ ಎಐಎಡಿಎಂಕೆಯ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಪಕ್ಷದ ಕಾರ್ಯಕಾರಿ ಅಧ್ಯಕ್ಷ ಇ ಮಧುಸೂದನನ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಶುಕ್ರವಾರ ವಜಾಗೊಳಿಸಲಾಗಿದೆ.
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರು ಮಧುಸೂದನನ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಿ ಇಂದು ಆದೇಶ ಹೊರಡಿಸಿದ್ದಾರೆ. ಅಲ್ಲದೆ ನೂತನ ಕಾರ್ಯಕಾರಿ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಕೆ.ಎ.ಸೆಂಗೊಟ್ಟಯ್ಯನ್ ಅವರನ್ನು ನೇಮಕ ಮಾಡಿದ್ದಾರೆ.
ಮಧುಸೂದನನ್ ಅವರು ನಿನ್ನೆಯಷ್ಟೆ ಶಶಿಕಲಾ ನಾಯಕತ್ವದ ವಿರುದ್ಧ ತಿರುಗಿಬಿದ್ದಿರುವ ಹಂಗಾಮಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ಘೋಷಿಸಿದ್ದರು. ಅಲ್ಲದೆ ಶಶಿಕಲಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದನ್ನು ವಿರೋಧಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.
ಇನ್ನು ಮಾಜಿ ಕೇಂದ್ರ ಸಚಿವ ಇ.ಪೊನ್ನುಸಾಮಿ ಅವರು ಶಶಿಕಲಾ ಅವರು ನೀಡಿದ ಆಹ್ವಾನವನ್ನು ತಿರಸ್ಕರಿಸಿದ್ದು, ತಾವು ಓ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಇಂದು ಪನ್ನೀರ್ ಸೆಲ್ವಂ ಅವರನ್ನು ಭೇಟಿ ಮಾಡಿ ಬೆಂಬಲ ಘೋಷಿಸಿದ ಪೊನ್ನುಸಾಮಿ, ಪನ್ನೀರ್ ಸೆಲ್ವಂ ಅವರು ಒಬ್ಬ ಪ್ರಮಾಣಿಕ ನಾಯಕ. ಹೀಗಾಗಿ ಪಕ್ಷ ಉಳಿಸಲು ಎಲ್ಲರೂ ಓಪಿಎಸ್ ಗೆ ಬೆಂಬಲ ನೀಡಿ ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos