ಮುಂಬೈ: ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ನೆಕ್ ಟು ನೆಕ್ ಫೈಟ್ ಮಾಡಿದ್ದ ಬಿಜೆಪಿ ಹಾಗೂ ಶಿವಸೇನೆಗೆ ಈಗ ಬೇರೆ ಆಯ್ಕೆ ಇಲ್ಲ. ಹೀಗಾಗಿ ಮತ್ತೆ ಒಂದಾಗಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ಹೇಳಿದ್ದಾರೆ.
ಬಿಎಂಸಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದ ಬಗ್ಗೆ ಮಾರಾಠಿ ವಾಹಿನಿಯೊಂದಕ್ಕೆ ಮಾತನಾಡಿರುವ ಗಡ್ಕರಿ, ನಮ್ಮ ಪಕ್ಷ ಮತ್ತು ಶಿವಸೇನೆಗೆ ಈಗ ಬೇರೆ ಆಯ್ಕೆ ಇಲ್ಲ. ಹೀಗಾಗಿ ಮತ್ತೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳಬೇಕು. ಆದರೆ ಈ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.
ದೇವೇಂದ್ರ ಫಡ್ನವಿಸ್ ಹಾಗೂ ಉದ್ಧವ್ ಠಾಕ್ರೆ ಇಬ್ಬರೂ ಪ್ರಬುದ್ಧ ನಾಯಕರಾಗಿದ್ದು, ಮೈತ್ರಿ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಗಡ್ಕರಿ ತಿಳಿಸಿದ್ದಾರೆ.
227 ಸದಸ್ಯ ಬಲ ಹೊಂದಿರುವ ಬಿಎಂಸಿ ಚುನಾವಣೆಯಲ್ಲಿ ಮಿತ್ರ ಪಕ್ಷ ಬಿಜೆಪಿ ವಿರುದ್ಧ ತಿರುಗಿಬಿದ್ದದ್ದ ಶಿವಸೇನೆ 84 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದೆ. ಶಿವಸೇನೆಗೆ ತೀವ್ರ ಪೈಪೊಟಿ ನೀಡಿರುವ ಬಿಜೆಪಿ 82 ಸ್ಥಾನಗಳಲ್ಲಿ ಗೆದ್ದಿದೆ. ಆದರೆ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಬಿಎಂಸಿಯಲ್ಲಿ ಅಧಿಕಾರ ಹಿಡಿಯಲು ಸರಳ ಬಹುಮತಕ್ಕೆ 114 ಸದಸ್ಯರ ಬೆಂಬಲ ಬೇಕು. ಹೀಗಾಗಿ ಈಗ ಬಿಜೆಪಿ-ಶಿವಸೇನೆ ಮೈತ್ರಿ ಅನಿವಾರ್ಯವಾಗಿದೆ.
ಬಿಜೆಪಿ ಜೊತೆ ಮೈತ್ರಿಯೊಂದಿಗೆ ಕಣಕ್ಕಿಳಿಯುವ ಮೂಲಕ ಶಿವಸೇನೆ ಕಳೆದ 20 ವರ್ಷಗಳಿಂದ ಮುಂಬೈ ಮಹಾನಗರ ಪಾಲಿಕೆಯನ್ನು ಆಳುತ್ತಿತ್ತು. ಆದರೆ ಈ ಬಾರಿ ಬಿಜೆಪಿಗೆ ಸೆಡ್ಡು ಹೊಡೆದಿದ್ದ ಶಿವಸೇನೆ ಮೈತ್ರಿ ಬಿಟ್ಟು ಏಕಾಂಗಿಯಾಗಿ ಸ್ಪರ್ಧಿಸಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos