ನವದೆಹಲಿ: ಬೆಂಗಳೂರಿನ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಶನಿವಾರ ಹೊಸ ವರ್ಷಾಚರಣೆ ವೇಳೆ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ವಿರುದ್ಧ ಸಿಪಿಐಎಂ ನಾಯಕಿ ಬೃಂದಾ ಕಾರಟ್ ಅವರು ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ಬೇಜವಾಬ್ದಾರಿ ಹೇಳಿಕೆ ನೀಡಿದ ಪರಮೇಶ್ವರ ಅವರಿಗೆ ಗೃಹ ಸಚಿವರ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಈ ಕೂಡಲೇ ಅವರು ರಾಜಿನಾಮೆ ನೀಡಬೇಕು ಎಂದು ಸಿಪಿಐಎಂ ಪಾಲಿಟಿಬ್ಯೂರೊ ಸದಸ್ಯೆ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸಿರುವ ಬೃಂದಾ ಕಾರಟ್, ಹೊಸ ವರ್ಷಾಚರಣೆ ವೇಳೆ ಪೊಲೀಸರ ಎದುರೇ ಮಹಿಳೆಯರ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆದರೂ ಇದುವರೆಗೆ ಒಬ್ಬರನ್ನು ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊಸ ವರ್ಷದಂದು ಯುವತಿಯರ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ ಗೃಹ ಸಚಿವರು, ಹೊಸ ವರ್ಷಾಚರಣೆ ದಿನ ಭದ್ರತೆಗಾಗಿ ನೂರಾರು ಪೊಲೀಸರು ಹಾಗೂ 25ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಅಳವಡಿಸಲಾಗಿದ್ದರೂ ಇಂತಹ ಘಟನೆ ಘಟಿಸಿದ್ದು ದುರದೃಷ್ಟಕರ. ನಾವು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ಹೊಸ ವರ್ಷ ಮತ್ತು ಕ್ರಿಸ್ ಮಸ್ ಸಂದರ್ಭದಲ್ಲಿ ಇಂತಹ ಘಟನೆಗಳು ಘಟಿಸುತ್ತವೆ. ಇದಕ್ಕೆ ಪಾಶ್ಚಿಮಾತ್ಯ ಸಂಸ್ಕೃತಿ ಅನುಕರಣೆಯೇ ಕಾರಣ ಎಂದು ಹೇಳಿದ್ದರು.