ನವದೆಹಲಿ: ದೆಹಲಿ ವಿಶ್ವವಿದ್ಯಾಲಯದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ (ಎಬಿವಿಪಿ) ಕಾರ್ಯಕರ್ತರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಇದೆ ವೇಳೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ದೆಹಲಿ ವಿಶ್ವವಿದ್ಯಾಲಯವನ್ನು 'ದೇಶವಿರೋಧಿ ಚಟುವಟಿಕೆಗಳಿಂದ ರಕ್ಷಿಸಲು' ಆರ್ಟ್ ಫ್ಯಾಕಲ್ಟಿ ವಿಭಾಗದಲ್ಲಿ ಈ ಪ್ರತಿಭಟನೆ ಆಯೋಜಿಸಲಾಗಿತ್ತು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿದ್ಯಾರ್ಥಿ ಘಟಕ ತಿಳಿಸಿದೆ.
'ಅರಾಜಕತೆ ಮತ್ತು ಭಾರತ ವಿರೋಧಿ ಅಭಿಯಾನ' ಬೆಂಬಲಿಸುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದ ರಾಜಮಾಸ್ ಕಾಲೇಜಿನಲ್ಲಿ ಫೆಬ್ರವರಿ ೨೨ ರಂದು ಎಬಿವಿಪಿ ಮತ್ತು ಎಡ ಪಕ್ಷಗಳಿಗೆ ಸಂಬಂಧಿಸಿದ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಸಿಎ) ಕಾರ್ಯಕರ್ತರ ನಡುವೆ ಘರ್ಷಣೆಗೆ ಕಾರಣವಾಗಿತ್ತು. ಎಬಿವಿಪಿ ಹಿಂಸಾಚಾರವನ್ನು ವಿರೋಧಿಸಿ ಕೆಲವು ದಿನಗಳ ಹಿಂದೆ ಎಐಸಿಎ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ಹಿಂಸೆಯ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಇಬ್ಬರು ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.