ಕೊಲಂಬೊ: ನವೆಂಬರ್ ತಿಂಗಳಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ನಿಗದಿಯಾಗಿದ್ದ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ(ಸಾರ್ಕ್)ದ ಸಭೆ ರದ್ದಾಗಿದ್ದು, ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ.
ಭಯೋತ್ಪಾದನೆ ವಿಚಾರಕ್ಕೆ ಸಂಬಂಧಿಸಿದಂತೆ ಪಾಕ್ ದ್ವಿಮುಖ ನೀತಿಯ ವಿರುದ್ಧ ಸಾರ್ಕ್ ರಾಷ್ಟ್ರಗಳು ಒಂದಾಗಿದ್ದು, ಭಾರತ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಹಾಗೂ ಭೂತಾನ್ ನವೆಂಬರ್ 9 ಮತ್ತು 10ರಂದು ಇಸ್ಲಾಮಾಬಾದ್ ನಲ್ಲಿ ನಿಗದಿಯಾಗಿದ್ದ ಸಾರ್ಕ್ ಸಮ್ಮೇಳನವನ್ನು ಬಹಿಷ್ಕರಿಸಿದ್ದವು.
ಎಂಟು ಸದಸ್ಯ ರಾಷ್ಟ್ರಗಳ ಪೈಕಿ ಒಂದೇ ಒಂದು ದೇಶ ಶೃಂಗಸಭೆ ಬಹಿಷ್ಕರಿಸಿದರೂ ಆ ಸಭೆ ಮುಂದೂಡಲಾಗುತ್ತದೆ ಅಥವಾ ರದ್ದಾಗುತ್ತದೆ. ಆದರೆ ಈಗ ನಾಲ್ಕು ರಾಷ್ಟ್ರಗಳು ಬಹಿಷ್ಕರಿಸಿರುವುದರಿಂದ ಸಾರ್ಕ್ ಶೃಂಗಸಭೆ ರದ್ದಾಗಿದ್ದು, ಅಧಿಕೃತ ಪ್ರಕಟಣೆಯೊಂದೆ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ,
ಉರಿ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತನ್ನ ವಿರೋಧ ಮುಂದುವರೆಸಿದ್ದು, ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿತ್ತು. ಇದರ ಬೆನ್ನಲ್ಲೇ ಇತರೆ ಸಾರ್ಕ್ ರಾಷ್ಟ್ರಗಳೂ ಕೂಡ ಸಭೆಯನ್ನು ಬಹಿಷ್ಕರಿಸಿದ್ದು, ಬಾಂಗ್ಲಾದೇಶ, ಆಫ್ಘಾನಿಸ್ತಾನ ಹಾಗೂ ಭೂತಾನ್ ಸರ್ಕಾರಗಳು ಸಾರ್ಕ್ ಸಭೆಯನ್ನು ಬಹಿಷ್ಕರಿಸಿ ಪತ್ರ ಬರೆದಿದ್ದವು.
ಗಡಿಯಲ್ಲಿನ ಭಯೋತ್ಪಾದನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲು ತಾನು ಸಿದ್ಧವಿಲ್ಲ ಎಂದು ಹೇಳಿ ಭಾರತ ಸಭೆಯಿಂದ ಹಿಂದೆ ಸರಿದಿತ್ತು. ಭಾರತದ ಬೆನ್ನಿಗೆ ನಿಂತಿರುವ ಬಾಂಗ್ಲಾದೇಶ, ಆಫ್ಘಾನಿಸ್ತಾನ ಹಾಗೂ ಭೂತಾನ್ ಸರ್ಕಾರಗಳು ತಾವೂ ಕೂಡ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪತ್ರಬರೆದಿವೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos