ಲಾಹೋರ್: ಮೊಹರಂ ಮೆರವಣಿಗೆ ಮೇಲೆ ದಾಳಿ ಮಾಡಲು ಸಂಚು ರೂಪಿಸಿದ್ದ 5 ಪಾಕಿಸ್ತಾನದ ತಾಲಿಬಾನ್ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ.
ಪಾಕಿಸ್ತಾನ ಭಯೋತ್ಪಾದನೆ ನಿಗ್ರಹ ಇಲಾಖೆ (ಸಿಟಿಡಿ) ಅಧಿಕಾರಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ರವಿ ನದಿ ಬಳಿ 8-10 ಉಗ್ರರು ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದು, ಮೊಹರಂ ಮೆರವಣಿಗೆ ವೇಳೆ ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂದು ಗುಪ್ತಚರಗಳಿಂದ ಮಾಹಿತಿ ತಿಳಿದುಬಂದಿತ್ತು. ಈ ಹಿನ್ನಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿ 5 ತಾಲಿಬಾನ್ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಕರ್ಬಲಾದ ಇಮಾಮ್ ಹುಸೇನ್ ಅವರ ತ್ಯಾಗ ನೆನೆದು ಶಿಯಾ ಮುಸ್ಲಿಮರು ತಮ್ಮ ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು. ಈ ವೇಳೆ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಗುಪ್ತಚರ ಮಾಹಿತಿ ನೀಡಿತ್ತು. ಈ ಹಿನ್ನಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಮೊಬೈಲ್ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ಗುಪ್ತಚರ ಮಾಹಿತಿಯಂತೆ ಸಿಟಿಡಿ ಅಧಿಕಾರಿಗಳು ಹಾಗೂ ಪೊಲೀಸರು ಸಂದಾ ಪ್ರದೇಶದಲ್ಲಿ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಮನೆಯೊಂದರಲ್ಲಿ ಉಗ್ರರು ಅಡಗಿ ಕುಳಿತಿರುವುದು ತಿಳಿದುಬಂದಿತ್ತು. ಬಳಿಕ ಶರಣಾಗುವಂತೆ ಉಗ್ರರಿಗೆ ಸೂಚಿಸಲಾಗಿತ್ತು. ಈ ವೇಳೆ ಉಗ್ರರು ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಬಳಿಕ ಕಾರ್ಯಾಚರಣೆ ನಡೆಸಿ ಐವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಸ್ಥಳದಲ್ಲಿ ಕತ್ತಲು ಆವರಿಸಿದ್ದರಿಂದ ಮೂವರು ಉಗ್ರರು ಪರಾರಿಯಾಗಿದ್ದಾರೆ. ಉಗ್ರರು ಅಡಗಿ ಕುಳಿತಿದ್ದ ಮನೆಯಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.