ದಿ ಹೇಗ್: ಪಾಕಿಸ್ತಾನ ಕುಲಭೂಷಣ್ ಜಾಧವ್ ಪ್ರಕರಣವನ್ನು ಕೇವಲ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದೆ. ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನದ ಬಳಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಅಷ್ಟೇ ಅಲ್ಲದೇ ಪಾಕಿಸ್ತಾನ ಈ ಪ್ರಕರಣದಲ್ಲಿ ವಿಯೆನ್ನಾ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಜಾಧವ್ ಪರ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದಾರೆ.
ಪಾಕಿಸ್ತಾನದಲ್ಲಿ ಗೂಢಚಾರಿಕೆ ಮಾಡುತ್ತಿರುವ ಆರೋಪದಡಿ ಬಂಧನಕ್ಕೊಳಗಾಗಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಪ್ರಕರಣ ಫೆ.18 ರಿಂದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದೆ.
ಐಸಿಜೆಯಲ್ಲಿ ವಾದ ಮಂಡಿಸಿರುವ ಹರೀಶ್ ಸಾಳ್ವೆ, ಪಾಕಿಸ್ತಾನ ಕುಲಭೂಷಣ್ ಜಾಧವ್ ಗೆ ಕೌನ್ಸಿಲರ್ ಭೇಟಿಯನ್ನು ನಿರಾಕರಿಸಿತ್ತು. ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆಯೇ ಪಾರದರ್ಶಕತೆ ಹೊಂದಿಲ್ಲ. ಅಲ್ಲಿನ ಸೇನಾ ಕೋರ್ಟ್ ನ ವಿಶ್ವಾಸಾರ್ಹತೆ ಪ್ರಶ್ನೆಗೆ ಅರ್ಹವಾಗಿದೆ. ಅಷ್ಟೇ ಅಲ್ಲದೇ ಪಾಕಿಸ್ತಾನ ಜಾಧವ್ ಗೆ ಕೌನ್ಸಿಲರ್ ಭೇಟಿಯನ್ನು ನಿರಾಕರಿಸಿ ವಿಯೆನ್ನಾ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಸಾಳ್ವೆ ಅಂತಾರಾಷ್ಟ್ರೀಯ ನ್ಯಾಯಾಲಯದೆದುರು ಪಾಕ್ ನ ನ್ಯಾಯಾಂಗ ವೈಫಲ್ಯವನ್ನು ಬಿಚ್ಚಿಟ್ಟಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಪಾಕಿಸ್ತಾನ ಜಾಧವ್ ಗೆ ಕಿರುಕುಳ ನೀಡಿದೆ. ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆ ಪಾರದರ್ಶಕವಾಗಿಲ್ಲ, ಸೇನಾ ಕೋರ್ಟ್ ನ ವಿಶ್ವಾಸಾರ್ಹತೆ ಪ್ರಶ್ನೆಗೆ ಅರ್ಹವಾಗಿದ್ದು ಮುಗ್ಧ ಭಾರತೀಯನ ಜೀವ ಅಪಾಯದಲ್ಲಿ ಸಿಲುಕಿದೆ ಎಂದು ಸಾಳ್ವೆ ಐಸಿಜೆ ಎದುರು ವಾದ ಮಂಡಿಸಿದ್ದಾರೆ.