ಹೇಗ್: ಪಾಕಿಸ್ತಾನ 'ಬಲವಂತದ ತಪ್ಪೊಪ್ಪಿಗೆ' ಆಧಾರದ ಮೇಲೆ ಭಾರತದ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ್ದು, ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಭಾರತ ಬುಧವಾರ ಅಂತರಾಷ್ಟ್ರೀಯ ನ್ಯಾಯಾಲಯ(ಐಸಿಜೆ)ಕ್ಕೆ ಮನವಿ ಮಾಡಿದೆ.
ಕಳೆದ ಸೋಮವಾರದಿಂದ ಐಸಿಜೆಯಲ್ಲಿ ಜಾಧವ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಜಾಧವ್ ಪ್ರಕರಣದ ವಿಚಾರಣೆ ನಡೆಸಿದ ಪಾಕ್ ಸೇನಾ ಕೋರ್ಟ್ ಇಡೀ ಪ್ರಕ್ರಿಯೆಯಲ್ಲಿ ಕನಿಷ್ಠ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾಗಿದೆ. ಸೇನಾ ಕೋರ್ಟ್ ನ ವಿಚಾರಣೆ ಹಾಗೂ ಗಲ್ಲು ಶಿಕ್ಷೆ ನೀಡಿರುವುದು ಕಾನೂನು ಬಾಹಿರ ಎಂದು ಘೋಷಿಸಿಬೇಕು ಮತ್ತು ಜಾಧವ್ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಪಾಕಿಸ್ತಾನಕ್ಕೆ ಆದೇಶಿಸಬೇಕು ಎಂದು ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ ದೀಪಕ್ ಮಿತ್ತಲ್ ಅವರು ಐಸಿಜೆ ನ್ಯಾಯಾಧೀಶರಿಗೆ ಮನವಿ ಮಾಡಿದರು.
ಜಾಧವ್ ಅವರು ಉಗ್ರ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ಸಮರ್ಥ ಸಾಕ್ಷ್ಯ ಒದಗಿಸುವಲ್ಲಿ ಪಾಕಿಸ್ತಾನ ವಿಫಲವಾಗಿದೆ. ಅಲ್ಲದೆ ಜಾಧವ್ ಅವರನ್ನು ಬಲವಂತದಿಂದ ತಪ್ಪೊಪ್ಪಿಕೊಳ್ಳುವಂತೆ ಮಾಡಲಾಗಿದೆ ಎಂದು ವಕೀಲ ಹರೀಶ್ ಸಾಳ್ವೆ ಅವರು ಭಾರತದ ಪರ ವಾದ ಮಂಡಿಸಿದರು.
ಪಾಕಿಸ್ತಾನ ಕುಲಭೂಷಣ್ ಜಾಧವ್ ಅವರ ತಪ್ಪೊಪ್ಪಿಗೆ ದಾಖಲೆಗಳನ್ನು ಪ್ರಚಾರದ ಸಾಧನವಾಗಿ ಬಳಸಿಕೊಳ್ಳುತ್ತಿದೆ ಎಂದು ಸಾಳ್ವೆ ಹೇಳಿದರು.
ಜಾಧವ್ ವಿರುದ್ಧ 2016ರ ಏಪ್ರಿಲ್ ನಲ್ಲಿ ಎಫ್ಐಆರ್ ದಾಖಲಿಸಲಾಗಿದೆ. 2016ರ ಮೇ ತಿಂಗಳಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಈ ಬಗ್ಗೆ ಭಾರತಕ್ಕೆ ಯಾವುದೇ ಮಾಹಿತಿ ನೀಡದೆ ವಿಯೆನ್ನಾ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಭಾರತ ಆರೋಪಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos