ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮಹಮ್ಮೂದ್ ಖುರೇಷಿ
ಇಸ್ಲಾಮಾಬಾದ್: ಭಾರತದೊಂದಿಗಿನ ಕಾಶ್ಮೀರ ವಿವಾದವನ್ನು ಬಗೆಹರಿಸುವಲ್ಲಿ ಪಾಕಿಸ್ತಾನ ನಿರೀಕ್ಷೆ ಮಾಡಿದ್ದಕ್ಕಿಂತ ಅಮೆರಿಕಾದ ಪ್ರಸ್ತಾಪ ಹೆಚ್ಚಿನದ್ದಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮಹಮ್ಮೂದ್ ಖುರೇಷಿ ತಿಳಿಸಿದ್ದಾರೆ.
ಖಾಸಗಿ ಸುದ್ದಿ ಸಂಸ್ಥೆಯೊಂದಿಗೆ ಸಂದರ್ಶನದಲ್ಲಿ ಮಾತನಾಡಿದ ಅವರು, ಕಾಶ್ಮೀರ ವಿವಾದ ಈ ಕ್ಷಣದಲ್ಲಿ ಎರಡು ದೇಶಗಳ ಮಧ್ಯೆ ಭಾರೀ ವಿವಾದ, ಹಿಂಸೆ ಉಂಟುಮಾಡುತ್ತಿರುವ ಸಮಸ್ಯೆಯಾಗಿದೆ. ಅದನ್ನು ಅಮೆರಿಕಾಕ್ಕೆ ನಮ್ಮ ಪ್ರಧಾನಿ ಇಮ್ರಾನ್ ಖಾನ್ ಮನದಟ್ಟು ಮಾಡಿದ್ದಾರೆ. ಅದಕ್ಕೊಂದು ಆದಷ್ಟು ಶೀಘ್ರದ ನಿರ್ಧಾರ ಬೇಕಾಗಿದೆ ಎಂದು ಹೇಳಿದ್ದಾರೆ.
ಕಳೆದ ವಾರ ಅಮೆರಿಕಾಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರೊಂದಿಗೆ ಡೊನಾಲ್ಡ್ ಟ್ರಂಪ್ ಮಾತನಾಡುತ್ತಾ ಕಾಶ್ಮೀರ ವಿವಾದ ಬಗೆಹರಿಸಲು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿ ತಮ್ಮನ್ನು ಕೋರಿದ್ದರು ಎಂದು ಹೇಳಿಕೆ ನೀಡಿದ್ದರು.
ಆದರೆ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಭಾರತ ನಿರ್ದಾಕ್ಷಿಣ್ಯವಾಗಿ ತಳ್ಳಿಹಾಕಿದೆ. ಇದು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆಯ ವಿಷಯವಾಗಿದೆ, ಇದರಲ್ಲಿ ಯಾರ ಮಧ್ಯಸ್ಥಿಕೆಯ ಅವಶ್ಯಕತೆಯಿಲ್ಲ ಎಂದು ಹೇಳಿತ್ತು.
ಕಾಶ್ಮೀರ ವಿವಾದ ಬಗೆಹರಿಸುವಲ್ಲಿ ಭಾರತದ ಹಠ ಮನೋಧರ್ಮದಿಂದ ಕಷ್ಟವಾಗುತ್ತಿದ್ದು ಕಣಿವೆಯಲ್ಲಿ ದಿನದಿಂದ ದಿನಕ್ಕೆ ಅಲ್ಲಿನ ಪರಿಸ್ಥಿತಿ ಹದಗೆಡುತ್ತಿದೆ. ಪಾಕಿಸ್ತಾನ ಶಾಂತಿಪ್ರಿಯ ದೇಶವಾಗಿದ್ದು ಭಾರತ ಸೇರಿದಂತೆ ಸುತ್ತಮುತ್ತಲ ದೇಶಗಳೊಂದಿಗೆ ಶಾಂತಿಯನ್ನೇ ಬಯಸುತ್ತದೆ ಎಂದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos