ವಿದೇಶ

ಕುಲಭೂಷಣ್ ಜಾಧವ್ ಪರ ವಕೀಲರ ನೇಮಕ ಮಾಡುವ ಕುರಿತು ಭಾರತದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ: ಪಾಕಿಸ್ತಾನ

Manjula VN

ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಪರ ವಕೀಲರ ನೇಮಕ ಮಾಡುವ ಕುರಿತು ಭಾರತದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಪಾಕಿಸ್ತಾನ ಶುಕ್ರವಾರ ಹೇಳಿದೆ. 

ರಾಜತಾಂತ್ರಿಕ ಮಾರ್ಗದ ಮೂಲಕ ಕುಲಭೂಷಣ್ ಜಾಧವ್ ಪರ ವಕೀಲರ ನೇಮಕ ಮಾಡುವಂತೆ ಭಾರತಕ್ಕೆ ಸಂದೇಶ ರವಾನಿಸಲಾಗಿತ್ತು. ಆದರೆ, ಈ ವರೆಗೂ ಭಾರತದಿಂದ ಯಾವುದೇ ಪ್ರತಿಕ್ರಿಯೆಗಳೂ ಬಂದಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಜಾಹಿದ್ ಹಫೀಜ್ ಚೌಧರಿ ಹೇಳಿದ್ದಾರೆ. 

ಜಾಧವ್ ಪರ ವಕೀಲರನ್ನು ನೇಮಕ ಮಾಡಲು ಭಾರತಕ್ಕೆ ಮತ್ತೊಂದು ಅವಕಾಶ ಸಿಗಬೇಕು ಎಂದು ಕೆಲವು ದಿನಗಳ ಹಿಂದೆ ಇಸ್ಲಾಮಾಬಾದ್ ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು. ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಕೂಡ ಒಂದು ತಿಂಗಳು ಮುಂದೂಡಿದೆ. 

ನಿವೃತ್ತ ನೌಕಾಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಬೇಹುಗಾರಿಕೆ ಆರೋಪದ ಮೇಲೆ ಪಾಕಿಸ್ತಾನ ಜೈಲಿನಲ್ಲಿ ದಾಖಲಿಸಲಾಗಿದೆ ಮತ್ತು ಅವರ ಮರಣದಂಡನೆ ಶಿಕ್ಷೆಯ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸಲು ಭಾರತೀಯ ವಕೀಲರನ್ನು ನೇಮಕ ಮಾಡುವ ಬಗ್ಗೆ ವಿಚಾರಣೆ ನಡೆಯುತ್ತಿದೆ.

SCROLL FOR NEXT