ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಗಲ್ಫ್ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ನಡುವೆ ಸುಮಾರು 5,98,000 ಭಾರತೀಯರು ಸ್ವದೇಶಕ್ಕೆ ಮರಳಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ದುಬೈನಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದ ಘಟನೆಯಲ್ಲಿ ಮೂವರು ಭಾರತೀಯ ಪ್ರಜೆಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಭಾರಿ ಕಚೇರಿ ಅವರೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ದಕ್ಷಿಣ ದುಬೈನಲ್ಲಿ ಮನೆಗಳ ಕ್ಷಿಪಣಿ ಅವಶೇಷಗಳು ಬಿದ್ದು ಇಬ್ಬರು ಭಾರತೀಯ ಪ್ರಜೆಗಳು, ಒಬ್ಬ ಬಾಂಗ್ಲಾದೇಶಿ ಪ್ರಜೆ ಮತ್ತು ಒಬ್ಬ ಶ್ರೀಲಂಕಾ ಪ್ರಜೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ದುಬೈ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಅಂತರ-ಸಚಿವಾಲಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅಸೀಮ್ ಆರ್ ಮಹಾಜನ್, ಸಂಘರ್ಷದ ಪ್ರದೇಶದಿಂದ ಭಾರತದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ವಿಮಾನಗಳು ಕಾರ್ಯನಿರ್ವಹಿಸುವುದರೊಂದಿಗೆ ಒಟ್ಟಾರೆ ವಿಮಾನ ಪರಿಸ್ಥಿತಿಯು ಸುಧಾರಿಸುತ್ತಿದೆ ಎಂದು ಹೇಳಿದರು.
ಯುದ್ಧ ಶುರುವಾದ ಫೆಬ್ರವರಿ 28 ರಿಂದ ಸುಮಾರು 5,98,000 ಪ್ರಯಾಣಿಕರು ಭಾರತಕ್ಕೆ ಮರಳಿದ್ದಾರೆ. ಸೌದಿ ಅರೇಬಿಯಾ ಮತ್ತು ಓಮನ್ನ ವಿವಿಧ ವಿಮಾನ ನಿಲ್ದಾಣಗಳಿಂದ ಭಾರತದ ವಿವಿಧ ಸ್ಥಳಗಳಿಗೆ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.
ಕತಾರ್ ವಾಯುಪ್ರದೇಶ ಭಾಗಶಃ ತೆರೆದಿರುವುದರಿಂದ, ಕತಾರ್ ಏರ್ವೇಸ್ ಇಂದು ಭಾರತಕ್ಕೆ ಸುಮಾರು 8 ರಿಂದ 10 ವಿಮಾನಗಳನ್ನು ನಿರ್ವಹಿಸುವ ನಿರೀಕ್ಷೆಯಿದೆ. ಯುಎಇಯಿಂದ ಭಾರತಕ್ಕೆ ಸುಮಾರು 90 ವಿಮಾನಗಳು ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದರು.
ಕುವೈತ್ ಮತ್ತು ಬಹ್ರೇನ್ ವಾಯುಪ್ರದೇಶವನ್ನು ಮುಚ್ಚಲಾಗಿದೆ. ಕುವೈತ್ನ ಜಜೀರಾ ಏರ್ವೇಸ್ ಮತ್ತು ಬಹ್ರೇನ್ನ ಗಲ್ಫ್ ಏರ್ ಸೌದಿ ಅರೇಬಿಯಾದ ದಮ್ಮಾಮ್ ವಿಮಾನ ನಿಲ್ದಾಣದಿಂದ ಭಾರತದ ವಿವಿಧ ಸ್ಥಳಗಳಿಗೆ ನಿಗದಿತವಲ್ಲದ ವಾಣಿಜ್ಯ ವಿಮಾನಗಳನ್ನು ನಿರ್ವಹಿಸುತ್ತಿವೆ" ಎಂದು ಮಹಾಜನ್ ಮತ್ತಷ್ಟು ಮಾಹಿತಿ ನೀಡಿದರು.